ಬೆಂಗಳೂರು-ಮೈಸೂರು ಹೆದ್ದಾರಿ “ಹೆಸರು’ ರಾಜಕಾರಣ
Team Udayavani, Dec 25, 2022, 5:45 AM IST
ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಹೆಸರು ಇಡುವುದನ್ನೇ ಕಾಂಗ್ರೆಸ್-ಬಿಜೆಪಿ ನಾಯಕರು ಈಗ ರಾಜಕಾರಣಗೊಳಿಸುತ್ತಿದ್ದು, ತಾವು ಸೂಚಿಸಿದ ಹೆಸರನ್ನೇ ನಾಮಕರಣ ಮಾಡುವಂತೆ ಕೇಂದ್ರ ಸಚಿವರು, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಶುಕ್ರವಾರ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಅವರು ದಿಲ್ಲಿಯಲ್ಲಿ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ “ಕಾವೇರಿ’ ಎಂದು ನಾಮಕರಣ ಮಾಡುವಂತೆ ಮನವಿ ಮಾಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ ಅವರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ಇಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದ್ದಾರೆ. ಅಖಂಡ ಕರ್ನಾಟಕದ ಅಭ್ಯುದಯಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ. ಅವರು ಹಾಕಿಕೊಟ್ಟ ದೂರದೃಷ್ಟಿ ಯೋಜನೆಗಳು ಈ ನಾಡಿನ ಜನರಿಗೆ ಅನುಕೂಲವಾಗಿವೆ. ಆ ಹಿನ್ನೆಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ಇರಿಸುವಂತೆ ಮನವಿ ಮಾಡಿದರು. ಇದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.