ದಿಲ್ಲಿಗೆ ಇಂದು ಸಿಎಂ ಬೊಮ್ಮಾಯಿ; ಈ ಬಾರಿಯೂ ಆಗುತ್ತಾ ಸಂಪುಟ ವಿಸ್ತರಣೆ?
Team Udayavani, Nov 28, 2022, 2:51 PM IST
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಚಟುವಟಿಕೆಗಳು ಗರಿಗೆದರಲಾರಂಭಿಸಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ವರಿಷ್ಢರ ಭೇಟಿಗೆ ಇನ್ನೂ ಸಮಯಾವಕಾಶ ನಿಗದಿಯಾಗದೆ ಇರುವುದು ಕುತೂಹಲ ಸೃಷ್ಟಿಸಿದೆ.
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಉಂಟಾಗಿರುವ ಗಡಿ ವಿವಾದ ಕುರಿತು ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಯ ವಿಚಾರವನ್ನು ಪ್ರಸ್ತಾಪಿಸಿದ್ದು, ಆಗಲಿ, ತ್ವರಿತವಾಗಿ ಮಾಡಿ, ಅದಕ್ಕೂ ಮುನ್ನ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಮಾತನಾಡಿ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ.
ಬೊಮ್ಮಾಯಿ ಸಂಪುಟದಲ್ಲಿ ಈಗ ಒಟ್ಟು ಆರು ಸಚಿವ ಸ್ಥಾನಗಳು ಖಾಲಿ ಇದ್ದು, ವಿಸ್ತರಣೆಗೆ ಹಸಿರು ನಿಶಾನೆ ಸಿಕ್ಕಿದರೆ ಯಾವುದೇ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ:ನಿವೃತ್ತ ಸೈನಿಕರೊಬ್ಬರ ಮೇಲೆ ಬಿದಿರಿನ ಕೋಲಿನಿಂದ ಹಲ್ಲೆ: ವಿಡಿಯೋ ವೈರಲ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುತ್ತಿರುವುದು ಸಹಜವಾಗಿ ಸಂಪುಟ ವಿಸ್ತರಣೆ/ ಪುನಾರಚನೆಯ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸಚಿವಾಕಾಂಕ್ಷಿಗಳು ಮತ್ತೆ ಕಣ್ಣರಳಿಸಿ ಕೂಡುವಂತೆ ಮಾಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ಪುನಾರಚನೆ ಕುರಿತು ಮಾಹಿತಿ ನೀಡುವುದಾಗಿ ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದರು.
ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೂರ್ನಾಲ್ಕು ದಿನಗಳಲ್ಲಿ ಸಂಪುಟ ಪುನಾರಚನೆಯಾಗುವ ವಿಶ್ವಾಸ ಇದೆ ಎಂದಿದ್ದರು.
ಒಂದು ವೇಳೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿದರೆ ಎರಡು ಮೂರು ದಿನಗಳಲ್ಲಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಈ ಬಾರಿಯ ಸಿಎಂ ದೆಹಲಿ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಪಕ್ಷ ಸೇರ್ಪಡೆ ಚರ್ಚೆ ಸಾಧ್ಯತೆ: ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಭೇಟಿಯಾದರೆ, ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗಲು ಅನೇಕ ನಾಯಕರು ಸಂಪರ್ಕ ಮಾಡುತ್ತಿದ್ದು, ಅಂತಹ ನಾಯಕರುಗಳ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಮುಖ್ಯಮಂತ್ರಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.