ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ
ಇಂಧನ ಜಿಎಸ್ ಟಿ ವ್ಯಾಪ್ತಿಗೆ ಬರಬೇಕು ಎಂದು ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
Team Udayavani, Jun 11, 2021, 12:31 PM IST
ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಶುಕ್ರವಾರ(ಜೂನ್ 11) ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಇದನ್ನೂ ಓದಿ:ಮೈಮರೆಯುವಂತಿಲ್ಲ, ನಿಯಮ ಸಡಿಲಿಕೆಯಿಂದ ಸೋಂಕು ಹೆಚ್ಚಾದರೆ ಮತ್ತೆ ಕ್ರಮ: ಸುಧಾಕರ್
ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ವ್ಯಾಪ್ತಿಗೆ ತರಬೇಕು ಎಂದು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬೇಡಿಕೆ ಇಟ್ಟಿದೆ. ವರದಿಗಳ ಪ್ರಕಾರ, ಇಂಧನ ಬೆಲೆ ಏರಿಕೆ ವಿರುದ್ಧ ರಾಷ್ಟ್ರಮಟ್ಟದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಕರ್ನಾಟಕ, ದೆಹಲಿ, ಪಂಜಾಬ್ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ.
ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ 9.20 ರೂಪಾಯಿ ಆಗಿದ್ದು, ಈಗ 32 ರೂಪಾಯಿಗೆ ಏರಿಕೆಯಾಗಿದೆ. ಆ ನಿಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ಹಿಂಪಡೆಯುವಂತೆ ನಾವು ಒತ್ತಾಯಿಸುತ್ತಿದ್ದೇವೆ. ಅಷ್ಟೇ ಅಲ್ಲ ಇಂಧನ ಜಿಎಸ್ ಟಿ ವ್ಯಾಪ್ತಿಗೆ ಬರಬೇಕು ಎಂದು ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.