ಮೊದಲ ಪ್ರಯತ್ನದಲ್ಲಿ ಸೋಲು: ಕುಸುಮಾ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
Team Udayavani, Nov 10, 2020, 6:16 PM IST
ಬೆಂಗಳೂರು: ರಾಜ್ಯದಲ್ಲಿ ಪ್ರತಿಷ್ಠೆಯ ಕಣ ಎಂದೇ ಗುರುತಿಸಲ್ಪಟ್ಟಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಬಿಜೆಪಿಯ ಮುನಿರತ್ನ ಅವರು ಕಾಂಗ್ರೆಸ್ ನ ಕುಸುಮಾ ವಿರುದ್ಧ ಭರ್ಜರಿಯಾಗಿ ಗೆಲುವು ಸಾಧಿಸಿದ್ದರು.
ಉಪಚುನಾವಣೆ ಸೋಲಿನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ರಾಜರಾಜೇಶ್ವರಿ ನಗರದಲ್ಲಿ ಇಷ್ಟು ಅಂತರದ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಈ ಕ್ಷೇತ್ರದಲ್ಲಿ ತೀವ್ರ ಪೈಪೋಟಿಯಿಂದ ಕೆಲವು ಸಾವಿರ ಮತಗಳ ಅಂತರದಲ್ಲಿ ಫಲಿತಾಂಶ ಬರಬಹುದು ಎಂದು ಭಾವಿಸಿದ್ದೆ. ಭವಿಷ್ಯದ ಲೆಕ್ಕಾಚಾರದೊಂದಿಗೆ ನಾವು ನಮ್ಮ ಅಭ್ಯರ್ಥಿಯನ್ನು ಸೂಚಿಸಿದ್ದೆವು. ಒಳ್ಳೆಯ ಅಭ್ಯರ್ಥಿಗೆ ಜನ ಕೂಡ ಸಹಕಾರ ನೀಡಿದ್ದಾರೆ. ಕುಸುಮಾ ಅವರು ಉತ್ತಮ ಹೋರಾಟ ಮಾಡಿದ್ದಾರೆ ಎಂದರು.
ನಮಗೆ ಸಿಕ್ಕಿರುವ ಮತ ಕೇವಲ ನಮ್ಮ ಪಕ್ಷದ ಮತ ಮಾತ್ರ ಅಲ್ಲ. ಬೇರೆ ಪಕ್ಷದ ಮತದಾರರು ಮತ ಹಾಕಿದ್ದಾರೆ. ಅವರು ಕೊಟ್ಟ ತೀರ್ಪನ್ನು ನಾವು ಒಪ್ಪುತ್ತೇವೆ ಎಂದರು.
ಇದನ್ನೂ ಓದಿ:ಮತದಾರನ ತೀರ್ಪನ್ನು ಗೌರವಯುತವಾಗಿ ಒಪ್ಪುತ್ತೇವೆ, ನಾನೇ ಸೋಲಿನ ಹೊಣೆ ಹೊರುತ್ತೇಬನೆ: ಡಿಕೆಶಿ
ಶಿರಾದಲ್ಲಿ ನಮ್ಮ ಲೆಕ್ಕಾಚಾರ ತಪ್ಪಾಗಿದೆ. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ನಮ್ಮ ಪಕ್ಷದ ಎಲ್ಲ ಮುಖಂಡರು ನಿರೀಕ್ಷಿಸಿದ್ದೆವು. ಅಲ್ಲಿ ಬಿಜೆಪಿಗೆ ಹೊಸದಾಗಿ ಅಷ್ಟು ಮತ ಹೋಗಿರುವುದು ಅಚ್ಚರಿ ತಂದಿದೆ. ಮುಂದಿನ ದಿನಗಳಲ್ಲಿ ಜನರ ವಿಶ್ವಾಸ ಹೇಗೆ ಪಡೆಯುವುದು, ಕ್ಷೇತ್ರಕ್ಕಾಗಿ ಹೇಗೆ ದುಡಿಯಬೇಕು ಎಂಬುದನ್ನು ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರಾಗಿ ನಿಮಗೆ ಮೊದಲ ಚುನಾವಣೆ ಇದು, ಸೋತಿದ್ದೀರಿ ಎಂದು ಅನೇಕರು ಹೇಳುತ್ತಿದ್ದಾರೆ. ನಾವು ಮೊದಲ ಚುನಾವಣೆಗಳನ್ನು ಸೋತು ಬಂದಿದ್ದೇನೆ. 1985ರಲ್ಲಿ ಮೊದಲು ಸ್ಪರ್ಧಿಸಿದಾಗ ಸೋತಿದ್ದೆ. ನಂತರ ಗೆದ್ದುಕೊಂಡು ಬಂದಿದ್ದೇನೆ. ಹೀಗಾಗಿ ಸೋಲೇ ಗೆಲುವಿನ ಮೆಟ್ಟಿಲು ಎಂಬುದರ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ; ಶಿರಾ’ದಲ್ಲಿ ‘ರಾರಾ’ಜಿಸಿದ ಕಮಲ: ಬಿಎಸ್ ವೈ ಮತ್ತಷ್ಟು ಭದ್ರ, ಕೈ ರಣತಂತ್ರ ಛಿದ್ರ
ಕಾಂಗ್ರೆಸ್ ನಲ್ಲಿ ಹೊಸಬರಿಗೂ ಆದ್ಯತೆ:
ಪಕ್ಷಕ್ಕೆ ಯುವಕರು, ಹಿರಿಯರು, ಹಳೆ ನಾಯಕರು, ಹೊಸಬರು ಎಲ್ಲರೂ ಬೇಕು. ಹೀಗಾಗಿ ಯುವ, ಸುಸಂಸ್ಕೃತ ಹಾಗೂ ವಿದ್ಯಾವಂತ ಅಭ್ಯರ್ಥಿ ಆಯ್ಕೆ ಮಾಡಿದೆವು. ನಮ್ಮ ಅಭ್ಯರ್ಥಿ ಬಗ್ಗೆ ಯಾರೂ ಮಾತನಾಡಲು ಸಾಧ್ಯವಾಗಲಿಲ್ಲ. ಮುಂದೆಯೂ ಬೇರೆ ಕ್ಷೇತ್ರಗಳಲ್ಲಿ ಹೊಸಬರನ್ನು ತಯಾರು ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.