ಹುಬ್ಬಳ್ಳಿಯಲ್ಲಿ ಹೆಜ್ಜೇನು ದಾಳಿ: ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು ಆಸ್ಪತ್ರೆಗೆ
Team Udayavani, Apr 4, 2022, 12:35 PM IST
ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ಸಂತ ಮೈಕಲ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು, ಶಿಕ್ಷಕರು, ಪಾಲಕರು ಹಾಗೂ ಪೊಲೀಸರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಸೋಮವಾರ ನಡೆದಿದೆ.
ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದ ವೇಳೆಯಲ್ಲಿಯೇ ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೇಲೆ ಸೋಮವಾರ ಹೆಜ್ಜೇನುಗಳು ಏಕಾಏಕಿ ದಾಳಿ ಮಾಡಿ ಆತಂಕ ಸೃಷ್ಟಿಸಿವೆ.
ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ರಗ್ಗು ಹೊತ್ತು ಬೆಂಕಿ ಹಚ್ಚಿ ಹೆಜ್ಜೇನು ದಾಳಿಯಿಂದ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬಂದಿದ್ದರು. ಶಾಲೆಯ ಅಕ್ಕಪಕ್ಕದ ಮನೆಯವರು ವಿದ್ಯಾರ್ಥಿಗಳ ಮೈಗೆ ಹೊದಿಕೆಗಳನ್ನು ಮುಚ್ಚಿ ಹೆಜ್ಜೇನುಗಳ ದಾಳಿ ತಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೆಜ್ಜೇನು ದಾಳಿಗೆ ಸಿಲುಕಿದವರನ್ನು ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.