ಮೆಟ್ರೋ ಪಿಲ್ಲರ್ ದುರಂತ; ಹೈಕೋರ್ಟ್ ನಿಂದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ
Team Udayavani, Jan 13, 2023, 4:35 PM IST
ಬೆಂಗಳೂರು : ನಿರ್ಮಾಣ ಹಂತದಲ್ಲಿರುವ ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತದಿಂದ ಮಹಿಳೆ ಮತ್ತು ಆಕೆಯ ಮಗುವಿನ ಮೃತ್ಯುವಿನ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಪ್ರಾರಂಭಿಸಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿನಾಗ್ರಿ ಅವರು ಅವಘಡದ ಬಗ್ಗೆ ಸುದ್ದಿ ವರದಿಗಳನ್ನು ಉಲ್ಲೇಖಿಸಿ ಕಳವಳ ವ್ಯಕ್ತಪಡಿಸಿದ್ದಾರೆ.
ಜನವರಿ 10 ರಂದು ಎಚ್ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಕುಸಿದು ದ್ವಿಚಕ್ರ ವಾಹನದ ಮೇಲೆ ಬಿದ್ದು ಮಹಿಳೆ ಮತ್ತು ಆಕೆಯ ಮಗು ಕೊನೆಯುಸಿರೆಳೆದಿದ್ದರು. ಕೈಗೊಂಡಿರುವ ಸುರಕ್ಷತಾ ಕ್ರಮಗಳು ಮತ್ತು ಟೆಂಡರ್ ದಾಖಲೆಗಳು ಸುರಕ್ಷತಾ ಕ್ರಮಗಳನ್ನು ನಿರ್ದಿಷ್ಟಪಡಿಸಿವೆಯೇ ಎಂಬ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ನ್ಯಾಯಾಲಯವು ಉತ್ತರಗಳನ್ನು ಕೇಳಿದೆ.
ರಾಜ್ಯ ಸರ್ಕಾರವು ಸುರಕ್ಷತಾ ಕ್ರಮಗಳ ಕುರಿತು ಆದೇಶಗಳನ್ನು ಹೊರಡಿಸಿದೆಯೇ ಮತ್ತು ನಿರ್ಮಾಣದಲ್ಲಿ ತೊಡಗಿರುವ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಜವಾಬ್ದಾರಿಯನ್ನು ನಿಗದಿಪಡಿಸಿದೆಯೇ ಎಂದು ಅದು ಕೇಳಿದೆ. ಪ್ರಕರಣದಲ್ಲಿ ರಾಜ್ಯ, ಬಿಬಿಎಂಪಿ ಮತ್ತು ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) ಅನ್ನು ಹೈಕೋರ್ಟ್ ಪ್ರತಿವಾದಿಗಳನ್ನಾಗಿ ಸೇರಿಸಿದೆ.ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.