ಕೊರಗಜ್ಜನ ಅವಹೇಳನ : ಮುಸ್ಲಿಂ ವರ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲು
Team Udayavani, Jan 8, 2022, 4:52 PM IST
ಮಂಗಳೂರು: ವಿವಾಹ ಸಮಾರಂಭದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮುಸ್ಲಿಂ ವರ ಹಾಗೂ ವಧುವಿನ ಕುಟುಂಬದ ಸದಸ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.
ತುಳುನಾಡು ಭಾಗದ ಪೂಜ್ಯ ಹಿಂದೂ ದೈವ ಕೊರಗಜ್ಜನ ವೇಷ ಧರಿಸಿದ್ದ ವರನ ವಿರುದ್ಧ ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು ಗ್ರಾಮದ ಚೇತನ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಇಲ್ಲಿನ ಪೊಲೀಸ್ ಮೂಲಗಳು ಶನಿವಾರ ತಿಳಿಸಿವೆ.
ಗುರುವಾರ ರಾತ್ರಿ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸಾಲೆತ್ತೂರಿನ ಅಝೀಝ್ ಎಂಬುವವರ ನಿವಾಸದಲ್ಲಿ ನಡೆದ ವಿವಾಹ ಸಮಾರಂಭಕ್ಕೆ ಮಂಜೇಶ್ವರ ಸಮೀಪದ ಉಪ್ಪಳ ಮೂಲದ ಬಶಿತ್ ಎಂಬಾತ ಕೊರಗಜ್ಜನ ವೇಷ ಧರಿಸಿ ಸ್ನೇಹಿತರ ಜತೆಗೂಡಿ ದೇವಮಾನವನ ಮಾನಹಾನಿಯಾಗುವ ರೀತಿಯಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಕ್ಲಿಪ್ಪಿಂಗ್ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದರು, ಅದು ವೈರಲ್ ಆಗಿತ್ತು.
ಪೊಲೀಸರು ಐಪಿಸಿ ಸೆಕ್ಷನ್ 153 (ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 (ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ ಪ್ರಕರಣವನ್ನು ದಾಖಲಿಸಿದ್ದಾರೆ.
ಇದನ್ನೂ ಓದಿ : ಕೊರಗಜ್ಜನ ಅಪಹಾಸ್ಯ: ಮಂಗಳವಾರ ಸಾಮೂಹಿಕ ಪ್ರಾರ್ಥನೆಗೆ ವಿಹೆಚ್ ಪಿ ಕರೆ
ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಮಾಜಿ ನಗರ ಮೇಯರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್ ಅವರು ಬಶಿತ್ ಮತ್ತು ಇತರ ಕುಟುಂಬ ಸದಸ್ಯರ ನಡವಳಿಕೆಯನ್ನು ಖಂಡಿಸಿದ್ದು, ಇಂತಹ ನಡವಳಿಕೆಯು ಮದುವೆಯ ಸಮಯದಲ್ಲಿ ಮುಸ್ಲಿಮರು ಅನುಸರಿಸುವ ನಿಯಮಗಳಿಗೆ ವಿರುದ್ಧವಾಗಿದೆ ಎಂಡಿದ್ದಾರೆ. ವರನು ದೇವತೆಯಂತೆ ವೇಷ ಧರಿಸುವ ಮೂಲಕ ಕೋಮು ಸೂಕ್ಷ್ಮ ಪ್ರದೇಶದಲ್ಲಿನ ಸಮುದಾಯವನ್ನು ಅವಮಾನಿಸಿದ್ದಾರೆ ಎಂದಿದ್ದಾರೆ.