ಪಕ್ಷದ ನಾಯಕರೊಂದಿಗೆ ಮಂಗಳೂರಿನಲ್ಲಿ ಪ್ರಧಾನಿ ಮೋದಿ ಸಭೆ
Team Udayavani, Aug 30, 2022, 10:42 PM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2ರಂದು ಮಂಗಳೂರಿಗೆ ಆಗಮಿಸುತ್ತಿದ್ದು, ಅಂದು ಮಂಗಳೂರಿನಲ್ಲಿಯೇ ಪಕ್ಷದ ರಾಜ್ಯದ ಪ್ರಮುಖ ನಾಯಕರ ಜತೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಪ್ರಧಾನಿಯವರ ರಾಜ್ಯ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ.
ಸೆ. 2ರಂದು ಕೊಚ್ಚಿಯ ಮೂಲಕ ಮಧ್ಯಾಹ್ನ ಮಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ, ಮೀನುಗಾರಿಕೆ ಬಂದರು ಅಭಿವೃದ್ಧಿ, ಎಲ್ಪಿಜಿ ಸ್ಟೋರೇಜ್ ಘಟಕದ ಶಂಕು ಸ್ಥಾಪನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಈ ಸಂದರ್ಭ ಪಕ್ಷದ ಪ್ರಮುಖ ನಾಯಕರ ಜತೆ ಸಭೆ ನಡೆಸಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಸಭೆಯ ಬಗ್ಗೆ ಯಾವುದೇ ಅಧಿಕೃತ ನೋಟಿಸ್ ನೀಡಿಲ್ಲ. ಸಭೆಯಲ್ಲಿ ಪಾಲ್ಗೊಳ್ಳುವವರಿಗೆ ಪ್ರಧಾನ ಮಂತ್ರಿ ಕಚೇರಿಯಿಂದಲೇ ನೇರವಾಗಿ ದೂರವಾಣಿ ಕರೆ ಮಾಡಿ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಯಾವ ವಿಚಾರ ಚರ್ಚಿಸಲಾಗುತ್ತದೆ ಎನ್ನುವ ಬಗ್ಗೆಯೂ ಯಾವುದೇ ರೀತಿಯ ಅಜೆಂಡಾ ನೀಡಿಲ್ಲ ಎನ್ನಲಾಗಿದ್ದು, ನಾಯಕರಿಗೂ ಈ ಸಭೆಯ ಬಗ್ಗೆ ಕುತೂಹಲ ಮೂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.