ಕೊಡವರಿಗೆ ಪ್ರತ್ಯೇಕ ಸ್ಥಾನಮಾನ: ಆ. 3ಕ್ಕೆ ವಿಚಾರಣೆ ಮುಂದೂಡಿಕೆ
Team Udayavani, Jun 16, 2023, 7:26 AM IST
ಬೆಂಗಳೂರು: ಕೊಡವರಿಗೆ ಪ್ರತ್ಯೇಕ ಸ್ಥಾನಮಾನಕ್ಕಾಗಿ ಆಗ್ರಹಿಸಿ ಕೊಡವ ನ್ಯಾಶನಲ್ ಕೌನ್ಸಿಲ್ (ಸಿಎನ್ಸಿ) ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ನಿರ್ದೇಶನ ನೀಡುವಂತೆ ಕೋರಿ ಮಾಜಿ ಸಚಿವ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಬುಧವಾರ ಸೂಚನೆ ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಲೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಪ್ರಕರಣ ವಿಚಾರಣೆಗೆ ಬಂದಿತು.
ಸುಬ್ರಮಣಿಯನ್ ಸ್ವಾಮಿ ಪರ ವಕೀಲರು, ನ್ಯಾಯಾಲಯ ಕಳೆದ ಬಾರಿ ನೀಡಿದ್ದ ನಿರ್ದೇಶನದಂತೆ ಅರ್ಜಿಯಲ್ಲಿ ಸಿಎನ್ಸಿಯನ್ನು ಪಕ್ಷಗಾರರನ್ನಾಗಿ ಮಾಡಲಾಗಿದೆ. ಆ ಕುರಿತು ಅರ್ಜಿಯಲ್ಲಿ ತಿದ್ದುಪಡಿ ಮಾಡಿ ಅದರ ಪ್ರತಿಯನ್ನು ಪ್ರತಿವಾದಿಗಳಿಗೆ ತಲುಪಿಸಲಾಗಿದೆ ಎಂದರು.
ಸಿಎನ್ಸಿ ಪರ ವಕೀಲರು, ತಾವು ಸುಬ್ರಮಣಿಯನ್ ಸ್ವಾಮಿ ಅವರ ವಾದವನ್ನು ಬೆಂಬಲಸಲಿದ್ದೇವೆ. ಆ ಕುರಿತು ಪ್ರಮಾಣಪತ್ರ ಸಲ್ಲಿಸುತ್ತೇವೆ ಎಂದರು.
ಕೇಂದ್ರ ಮತ್ತು ರಾಜ್ಯ ಸರಕಾರಿ ವಕೀಲರು, ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಆ.3ಕ್ಕೆ ಮುಂದೂಡಿತು. ಅಷ್ಟರಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಿತು.
ಸಿಎನ್ಸಿ ಕೊಡವರಿಗೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಕೋರಿ ಮನವಿ ಮಾಡಿದ್ದಾರೆ, ಆದರೆ, ಸರಕಾರ ಈವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಕುರಿತಂತೆ ಆಯೋಗವೊಂದನ್ನು ರಚಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.