40 ಪರ್ಸೆಂಟ್ ಆರೋಪ: ರಾಜ್ಯ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ
Team Udayavani, Nov 19, 2021, 5:01 PM IST
ಮೈಸೂರು: ರಾಜ್ಯ ಸರ್ಕಾರ ವಜಾ ಮಾಡುವಂತೆ ರಾಜ್ಯ ಪಾಲರಿಗೆ ಪತ್ರ ಬರೆಯುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು,’ಪ್ರತಿ ಕಾಮಗಾರಿ ಟೆಂಡರ್ ಪಡೆಯಲು ಶೇ.40ರಷ್ಟು ಪರ್ಸೆಂಟೇಜ್ ಕೊಡಬೇಕು ಅಂತ ಆರೋಪಿಸಿ ರಾಜ್ಯ ಗುತ್ತಿಗೆದಾರರ ಸಂಘದವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಪರ್ಸೆಂಟೇಜ್ ಎಂಬುದನ್ನೂ ವಿವರಿಸಿದ್ದಾರೆ.ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಯಾವಯಾವ ಇಲಾಖೆಯಲ್ಲಿ ಎಷ್ಟೆಷ್ಟು ಪರ್ಸೆಂಟೇಜ್ ಎಂಬುದನ್ನು ಮಾಧ್ಯಮಗಳ ಮುಂದೆಯೇ ಬಹಿರಂಗವಾಗಿ ಹೇಳಿದ್ದಾರೆ.ಈ ಆರೋಪಗಳನ್ನ ನಾನು ಮಾಡಿದ್ದರೆ ಪ್ರತಿಪಕ್ಷದವರು ಅನ್ನಬಹುದಿತ್ತು. ಆದರೆ ಟೆಂಡರ್ ಪಡೆಯುವವರೆ ಶೇ.40ಪರ್ಸೆಂಟ್ ಆರೋಪ ಮಾಡಿರುವುದರಿಂದ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮುಂದುವರೆಯಬಾರದು’ ಎಂದು ಕಿಡಿ ಕಾರಿದರು.
‘ಪ್ರಧಾನಿ ಮೋದಿಯವರು ‘ನಾ ಖಾವೂಂಗಾ ನಾ ಖಾನೇದೂಂಗಾ’ ಅನ್ನುತ್ತಿದ್ದರು. ಆದರೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಕಮಿಷನ್ ಪಡೆಯುವ ಸರ್ಕಾರವನ್ನ ನಾನು ಜೀವಮಾನದಲ್ಲಿ ನೋಡಿಲ್ಲ.ಹೀಗಾಗಿ ಕೂಡಲೇ ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ’ ಎಂದರು.
‘ದೆಹಲಿ ರೈತರ ಹೋರಾಟದಲ್ಲಿ ಮೃತಪಟ್ಟವರಿಗೆ ತಲಾ 25ಲಕ್ಷ ಪರಿಹಾರ ನೀಡಬೇಕು. ಇದುವರೆಗೂ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವವರೂ ರೈತರೇ ಅಲ್ಲ ಅನ್ನುತ್ತಿದ್ದರು. ಈಗ ಮೂರು ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡಿದ್ದಾರೆ. ಈಗ ರೈತರ ಹೋರಾಟಕ್ಕೆ ಮಣಿದು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ.ಬಿಜೆಪಿಯವರಿಗೆ ತಡವಾಗಿಯಾದರೂ ಜ್ಞಾನೋದಯವಾಗಿದೆ.ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ ಅಂತ ನಾನು ಹೇಳುವುದಿಲ್ಲ.ಇದು ರೈತರ ಹೋರಾಟಕ್ಕೆ ಸಂದ ಜಯ.ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ರೈತರ ನ್ಯಾಯಯುತವಾದ ಹೋರಾಟಕ್ಕೆ ನಮ್ಮ ಬೆಂಬಲ ಇದೆ’ ಎಂದರು.