BSY ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ : ಸಿದ್ದರಾಮಯ್ಯ ಆರೋಪ
Team Udayavani, Jan 23, 2021, 5:35 PM IST
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿರುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಯಡಿಯೂರಪ್ಪ ಅವರ ಕುಮ್ಮಕ್ಕು ಕಾರಣ ಎಂದು ದೂರಿದರು.
ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಸಲ್ಲಿಸಿ ಪರವಾನಿಗೆ ಪಡೆಯಬಹುದು ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯೇ ಅಪರಾಧ. ಅದಕ್ಕೆ ಏನು ಶಿಕ್ಷೆ ? ಅರ್ಜಿ ಹಾಕಿಕೊಂಡು ಅಕ್ರಮವನ್ನು ಸಕ್ರಮ ಮಾಡಿಕೊಳ್ಳಿ ಎಂದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಹೇಳಬಹುದೇ ? ಎಂದು ಪ್ರಶ್ನಿಸಿದರು.
ಇದು ಅಕ್ರಮ ಮನೆ, ಜಮೀನು ಸಕ್ರಮ ಮಾಡುವುದಲ್ಲ. ಹಾಗಾದರೆ ಗಣಿ ಇಲಾಖೆಯ ಕಾನೂನು ಇರುವುದೇಕೆ? ಎಂದು ಮುಖ್ಯಮಂತ್ರಿಗಳ ಹೇಳಿಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರಲಿ, ಅದರಲ್ಲಿ ಯಾವುದೇ ಪಕ್ಷದವರು ಭಾಗಿಯಾಗಿರಲಿ. ಸರ್ಕಾರ ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.
ಇದನ್ನೂ ಓದಿ:ಹುಣಸೋಡು ದುರಂತ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ : ಸಿಎಂ
ಸಿಎಂ, ಉಸ್ತುವಾರಿ ಸಚಿವರೇ ಹೊಣೆ :
ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿರುವ ದುರಂತ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದೆ. ಆಂಧ್ರದಿಂದ ಪರವಾನಿಗೆ ಇಲ್ಲದೆ ಜಿಲಿಟಿನ್ ಮತ್ತು ಡೈನಮೇಟ್ ತರಲಾಗಿತ್ತು. ಇದು ಮೊದಲ ಅಪರಾಧ. ತಂದಿದ್ದನ್ನು ಸುರಕ್ಷಿತವಾದ ಜಾಗದಲ್ಲಿ ಇಡದೇ ಹೋಗಿದ್ದಿದು ಎರಡನೇ ಅಪರಾಧ. ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯ ಈ ದುರಂತದಲ್ಲಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರೇ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಕಡೆ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ ಎಂದು ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯವರ ತವರು ಜಿಲ್ಲೆಯಲ್ಲಿಯೇ ಪರವಾನಿಗೆ ಇಲ್ಲದೆ ಯದ್ವಾತದ್ವಾ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದರೆ ಇದು ಜಿಲ್ಲಾಡಳಿತರ ವೈಫಲ್ಯ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಅವರು ಇದರ ಹೊಣೆ ಹೊರಬೇಕು ಎಂದರು.
ಇದನ್ನೂ ಓದಿ:ಸರ್ಚ್ ಎಂಜಿನ್ ಸೇವೆಯನ್ನು ಸ್ಥಗಿತಗೊಳಿಸುತ್ತೇವೆ: ಆಸ್ಟ್ರೇಲಿಯಾಕ್ಕೆ ಗೂಗಲ್ ಬೆದರಿಕೆ
ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ :
ಯಾರೋ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಹಂ.ಪಾ. ನಾಗರಾಜಯ್ಯ ಅವರನ್ನು ಮಂಡ್ಯ ಪೊಲೀಸರು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿರುವುದು ಇಡೀ ಸಾಹಿತಿಗಳ ವಲಯಕ್ಕೆ ಮಾಡಿದ ಅವಮಾನ. ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದ್ದೇವೆಯೋ ಅಥವಾ ಇಲ್ಲವೋ ಎಂಬ ಅನುಮಾನ ಇದರಿಂದ ಉಂಟಾಗಿದೆ.