ವಿಟ್ಲ: ಯುವತಿಯ ಮಾನಭಂಗಕ್ಕೆ ಯತ್ನ
Team Udayavani, May 15, 2023, 5:41 AM IST
ಬಂಟ್ವಾಳ: ದ್ವಿಚಕ್ರ ಸವಾರನೋರ್ವ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೋರ್ವಳ ಮೈಗೆ ಕೈ ಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆ ಶನಿವಾರ ವಿಟ್ಲ ಕಸ್ಬಾ ಗ್ರಾಮದ ಬನದಲ್ಲಿ ನಡೆದಿದೆ.
ಶನಿವಾರ ಮಧ್ಯಾಹ್ನದ ವೇಳೆ ಕಡಂಬು ನಿವಾಸಿ ಯುವತಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅನಿಲಕಟ್ಟೆ ಭಾಗದಿಂದ ದ್ವಿಚಕ್ರ ವಾಹನದಲ್ಲಿ ಬಂದ ಯುವಕ ದಾರಿಯ ಕುರಿತು ವಿಚಾರಿಸುವ ನೆಪದಲ್ಲಿ ಯುವತಿಯ ಜತೆ ಮಾತನಾಡಿದ್ದ. ಬಳಿಕ ಆಕೆಯ ಮೈಗೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿ ಮಾನಭಂಗಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಯುವತಿ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಠಾಣೆಗೆ ಆಶಾ ತಿಮ್ಮಪ್ಪ ಭೇಟಿ
ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅದಕ್ಕೂ ಮೊದಲು ಅವರು ಯುವತಿ ಮನೆಗೆ ಭೇಟಿ ನೀಡಿ ಆಕೆಯ ಜತೆ ಮಾತುಕತೆ ನಡೆಸಿ ಮಾಹಿತಿ ಪಡೆದಿದ್ದರು.