ಮೈತ್ರಿ ಸರ್ಕಾರಕ್ಕೆ ಅಗ್ನಿಪರೀಕ್ಷೆ; ಗುರುವಾರ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ
Team Udayavani, Jul 15, 2019, 2:49 PM IST
ಬೆಂಗಳೂರು:ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಸೋಮವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಗುರುವಾರ ವಿಶ್ವಾಸಮತ ಯಾಚಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದ ಕಲಾಪ ಸಮಿತಿ ಸಭೆಯಲ್ಲಿ, ಇಂದೇ ವಿಶ್ವಾಸಮತ ಯಾಚಿಸಲು ಸೂಚನೆ ನೀಡುವಂತೆ ಬಿಜೆಪಿ ಪಟ್ಟು ಹಿಡಿದಿತ್ತು. ಆದರೆ ಅತೃಪ್ತ ಶಾಸಕರ ರಾಜೀನಾಮೆ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಮಂಗಳವಾರ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಗುರುವಾರ 11ಗಂಟೆಗೆ ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ಸ್ಪೀಕರ್ ಸ್ಪಷ್ಟಪಡಿಸಿದ್ದರು.
ಈ ತೀರ್ಮಾನಕ್ಕೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಒಪ್ಪಿಗೆ ಸೂಚಿಸಿರುವುದಾಗಿ ಸಭೆಯ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ವಿಶ್ವಾಸಮತ ದಿನಾಂಕ ನಿಗದಿ ಮಾಡುವ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಕೃಷ್ಣಭೈರೇಗೌಡ, ಗಣೇಶ್ ಹುಕ್ಕೇರಿ, ಕೆಜೆ ಜಾರ್ಜ್, ಡಾ.ಜಿ.ಪರಮೇಶ್ವರ್, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಸುನಿಲ್ ಕುಮಾರ್, ಗೋವಿಂದ ಕಾರಜೋಳ, ಜೆಸಿ ಮಾಧುಸ್ವಾಮಿ, ವಿಶ್ವೇಶ್ವರ ಹೆಗಡೆ ಕಾಗೇರಿ ಭಾಗವಹಿಸಿದ್ದರು.