ಅನರ್ಹ ಶಾಸಕರ ಪ್ರಕರಣ; ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸುತ್ತೇನೆ; ಮಾಜಿ ಸ್ಪೀಕರ್
Team Udayavani, Nov 13, 2019, 12:35 PM IST
ಬೆಂಗಳೂರು: ಹದಿನೇಳು ಮಂದಿ ಅನರ್ಹ ಶಾಸಕರ ಪ್ರಕರಣದ ಸಂಬಂಧ ಸುಪ್ರೀಂಕೋರ್ಟ್ ನ ನ್ಯಾ.ಎನ್.ವಿ.ರಮಣ್ ನೇತೃತ್ವದ ತ್ರಿಸದಸ್ಯ ಪೀಠ ಬುಧವಾರ ತೀರ್ಪು ಪ್ರಕಟಿಸಿದ್ದು, ಇದಕ್ಕೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುಪ್ರೀಂ ತೀರ್ಪಿನ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಗೌರವಿಸುತ್ತೇನೆ. ಈ ಮಾತನ್ನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ನನ್ನ ಆದೇಶ ಎತ್ತಿಹಿಡಿದಿದೆ. ಆದರೆ ಕೆಲವು ಅಂಶವನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ ಎಂದರು.
ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ಅವರನ್ನು ಆಯ್ಕೆ ಮಾಡೋದು, ಬಿಡೋದು ಮತದಾರರಿಗೆ ಬಿಟ್ಟಿದ್ದು ಎಂದು ಹೇಳಿದರು.
ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಎತ್ತಿಹಿಡಿದಿದೆ. ಅಲ್ಲದೇ ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಶಾಸಕರ ಅನರ್ಹತೆಗೆ ಕಾಲನಿಗದಿ ಪಡಿಸಿರುವುದು ಸರಿಯಲ್ಲ ಎಂದು ಸುಪ್ರೀಂ ಹೇಳಿದೆ.