ದ.ಕ: ಎಲ್ಲ ಗಡಿಗಳ ತೆರವು
Team Udayavani, Aug 24, 2020, 11:41 PM IST
ಮಂಗಳೂರು: ಕೇರಳ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯದಿಂದ ಕರ್ನಾಟಕಕ್ಕೆ ಆಗಮಿಸುವ ಕೋವಿಡ್-19 ರೋಗ ಲಕ್ಷಣಗಳಿಲ್ಲದ ಪ್ರಯಾಣಿಕರಿಗೆ ಕ್ವಾರಂಟೈನ್ ಅಗತ್ಯವಿಲ್ಲ ಹಾಗೂ ಗಡಿಗಳಲ್ಲಿ ವೈದ್ಯಕೀಯ ತಪಾಸಣೆಯ ಅಗತ್ಯವಿಲ್ಲ ಎಂದು ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ, ದ.ಕ. ಜಿಲ್ಲೆಯ ಎಲ್ಲ ಗಡಿಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ.
ಈ ಬಗ್ಗೆ “ಉದಯವಾಣಿ’ ಜತೆಗೆ ಮಾತನಾಡಿದ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಅವರು, ಹೊಸ ನಿಯಮದ ಪ್ರಕಾರ ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಹಾಗೂ ಗಡಿಗಳಲ್ಲಿ ತಪಾಸಣೆ ಇರುವುದಿಲ್ಲ. ಜಿಲ್ಲೆಯ ಎಲ್ಲ ಗಡಿಗಳನ್ನು ಸೋಮವಾರ ಸಂಜೆಯಿಂದ ತೆರವು ಮಾಡಲಾಗಿದ್ದು, ಬೇರೆ ರಾಜ್ಯದಿಂದ ಜಿಲ್ಲೆಗೆ ಆಗಮನಕ್ಕೆ ಯಾವುದೇ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ. ಆದರೆ ಕರ್ನಾಟಕದಿಂದ ಸದ್ಯಕ್ಕೆ ಹೊರ ರಾಜ್ಯಕ್ಕೆ ತೆರಳುವವರು ಆ ರಾಜ್ಯದ ನಿಯಮಾವಳಿಗಳನ್ನು ಪಾಲಿಸಬೇಕಾಗಿದೆ.