ಮಂಗಳೂರು: ದಸರಾ ದರ್ಶಿನಿಗೆ ಚಾಲನೆ
Team Udayavani, Sep 26, 2022, 10:12 AM IST
ಮಂಗಳೂರು: ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನದ ವಿಶೇಷ ಪ್ಯಾಕೇಜ್ ಪ್ರವಾಸ ಕಾರ್ಯಚರಣೆಗೆ ಸೆ.26ರ ಸೋಮವಾರ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಆವರಣದಲ್ಲಿ ಚಾಲನೆ ನೀಡಿದರು.
ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8-9 ಗಂಟೆಗೆ ಹೊರಟು ಮಂಗಳಾದೇವಿ ದೇವಸ್ಥಾನ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನ, ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಭಗವತಿ ದೇವಸ್ಥಾನ ಹಾಗೂ ಬೀಚ್, ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವ ಮಾರಿಯಮ್ಮ ದೇವಸ್ಥಾನ ಹಾಗೂ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವದುರ್ಗೆಯರ ದರ್ಶನ ಮೂಲಕ ಮಂಗಳೂರು ಬಸ್ ನಿಲ್ದಾಣಕ್ಕೆ ವಾಪಸ್ ಆಗುವ ಈ ಸೇವೆಯ ಮೂರು ಬಸ್ ಗಳಿಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮೂರು ಬಸ್ಸುಗಳ 90ಕ್ಕೂ ಹೆಚ್ಚು ಪ್ರಯಾಣಿಕರು, ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ವಿಭಾಗಿಯ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಸಿಬ್ಬಂದಿಗಳು, ಚಾಲಕರು ಹಾಗೂ ನಿರ್ವಾಹಕರು, ಭಕ್ತಾದಿಗಳು ಉಪಸ್ಥಿತರಿದ್ದರು.