ನಿಷ್ಪಕ್ಷವಾಗಿ ಚುನಾವಣೆ ನಡೆಸಲು ಸಜ್ಜಾಗಿ: ಸೆಂಥಿಲ್
Team Udayavani, Mar 5, 2019, 6:55 AM IST
ಮಂಗಳೂರು: ನ್ಯಾಯಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗೆ ಅಧಿಕಾರಿಗಳು ಸಜ್ಜಾಗಿ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ನಿರ್ದೇಶ ನೀಡಿದ್ದಾರೆ. ದ.ಕ. ಜಿ.ಪಂ.ನಲ್ಲಿ ಸೋಮವಾರ ಅವರು ಚುನಾವಣಾ ನೋಡಲ್ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಎಲ್ಲ ಅಧಿಕಾರಿಗಳು ಚುನಾವಣಾ ಕರ್ತವ್ಯದ ಗಂಭೀರತೆಯನ್ನು ಅರಿತು ಚುನಾವಣಾ ಆಯೋಗದ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಿ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸ ಬೇಕು. ಎಲ್ಲೂ ಪಕ್ಷಪಾತವಾಗಿದೆ ಎಂಬ ಆರೋಪಗಳಿಗೆ ಅವಕಾಶ ನೀಡಬಾರದು ಎಂದು ಸೂಚಿಸಿದರು. ಚುನಾವಣಾ ಕರ್ತವ್ಯದಲ್ಲಿ ನಿರತ ಪೊಲೀಸ್ ಅಧಿಕಾರಿಗಳು ನೋಡಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಚುನಾವಣಾ ಕರ್ತವ್ಯ ವೇಳೆ ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಸೆಲ್ವಮಣಿ ಆರ್. ಉಪಸ್ಥಿತರಿದ್ದರು. ಬಳಿಕ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ವಲ್ನರಬೇಲ್ ಮ್ಯಾಪಿಂಗ್ ಮತ್ತು ಚುನಾವಣಾ ಆಯೋಗಕ್ಕೆ ಕಳುಹಿಸಲಿರುವ ವರದಿಗಳ ಬಗ್ಗೆ ನೋಡಲ್ ಅಧಿಕಾರಿಗಳ ಜತೆ ಚರ್ಚಿಸಲಾಯಿತು. ಡಿಸಿಪಿ ಹನುಮಂತರಾಯ ಉಪಸ್ಥಿತರಿದ್ದರು.