ಸುಸ್ಥಿರ ಅಭಿವೃದ್ಧಿ ಕಡೆಗೆ ಚಿಂತನೆ ನಡೆಸಬೇಕು
Team Udayavani, Jan 23, 2019, 8:19 AM IST
ಸುಬ್ರಹ್ಮಣ್ಯ: ಸುಸ್ಥಿರ ಬಳಕೆ ಮತ್ತು ಉತ್ಪಾದನೆಯ ಅಸ್ಥಿರತೆ ಸ್ಥಿರಪಡಿಸಿ, ಜಾಗತಿಕ ಸುಸ್ಥಿರ ಅಭಿವೃದ್ಧಿ ಗುರಿಗಳ ಕಡೆಗೆ ಚಿಂತನೆ ನಡೆಸಬೇಕಿದೆ ಎಂದು ಮುಂಬಯಿ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸ್ ಪ್ರೋಗ್ರಾಮ್ ಕೋ-ಆರ್ಡಿನೇಟರ್ ಡಾ| ಅನುಪಮಾ ಸಿಂಗ್ ಹೇಳಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಮಂಗಳವಾರ ಸಾಮಾಜಿಕ ಉದ್ಯಮಶೀಲತೆ ಹಾಗೂ ಸುಸ್ಥಿರ ಅಭಿವೃದ್ಧಿ ಕುರಿತು ನಡೆದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು, ಶಿಕ್ಷಕರು ಸಾಮಾಜಿಕ ಉದ್ಯಮಶೀಲತೆಯಲ್ಲಿ ಶೋಧನೆಗಳನ್ನು ತೊಡಗಿಸಿಕೊಳ್ಳಬೇಕಿದೆ. ದೇಶ ಅಭಿವೃದ್ಧಿ ಕಡೆಗೆ ಸಾಗಲು ಸುಸ್ಥಿರ ಅಭಿವೃದ್ಧಿ ಜತೆಗೆ ಸಾಮಾಜಿಕ ಉದ್ಯಮ ಶೀಲತೆಸರಿಯಾದ ದಿಕ್ಕಿನಲ್ಲಿ ಸಾಗಬೇಕು ಎಂದರು.
ಸಂಯೋಜಕ ವಿನ್ಯಾಸ್, ಡಾ| ಉದಯಕುಮಾರ್ ಎಂ.ಎ., ಮಂಗಳ ಗಂಗೋತ್ರಿ ವಿಶ್ವವಿದ್ಯಾನಿಲಯದ ಪ್ರಾಂಶುಪಾಲ ಪ್ರೊ| ಶ್ರೀಧರ್ ಟಿ.ಎನ್. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮೋಹನದಾಸ್ ರೈ ಉಪಸ್ಥಿತರಿದ್ದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ| ರಂಗಯ್ಯ ಶೆಟ್ಟಿಗಾರ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಉಪನ್ಯಾಸಕಿ ಪುಷ್ಪಾ ಡಿ. ಕಾರ್ಯಕ್ರಮ ನಿರೂಪಿಸಿದರು. ಸಂಘಟನ ಕಾರ್ಯದರ್ಶಿ ಪ್ರೊ| ಉದಯಕುಮಾರ್ ಕೆ. ವಂದಿಸಿದರು.
ಲಿಂಗೈಕ್ಯರಾದ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಾಗಾರದಲ್ಲಿ ವಿವಿಧ ಕಾಲೇಜುಗಳ ಉಪನ್ಯಾಸಕರು ಹಾಗೂ ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿವಿಧ ವಿಷಯಗಳ ಮಾಹಿತಿ
ಸಾಮಾಜಿಕ ಉದ್ಯಮಶೀಲತೆಯಲ್ಲಿ ಹೊಸ ಅವಕಾಶಗಳನ್ನು ಪರಿಶೋಧಿಸುವಲ್ಲಿ ಸಹಾಯ, ಕ್ರಿಯಾತ್ಮಕ ಚಿಂತನೆಗೆ ಅವಕಾಶ, ಸುಸ್ಥಿರ ಅಭಿವೃದ್ಧಿಯ ಪ್ರಾಮುಖ್ಯತೆ ಬಗ್ಗೆ ಅರಿವು, ಭಾರತ ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಮಾಜಿಕ ಉದ್ಯಮಶೀಲತೆ ಪಾತ್ರವನ್ನು ವಿವರಿಸುವುದು, ಸಮಾಜ ಎದುರಿಸುತ್ತಿರುವ ಸಮಸ್ಯೆಯ ಕುರಿತು ಗಂಭೀರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸುವ ಉದ್ದೇಶಗಳ ಕುರಿತು ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.
ಆಸಕ್ತಿ ಹೊಂದಬೇಕು
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಿಕ್ಷಣದ ಜತೆಗೆ ಸಾಮಾಜಿಕ ಚಿಂತ ನೆಗಳು, ಉದ್ಯಮದ ಕಡೆಗಿನ ಆಸಕ್ತಿ ಹೊಂದಿರಬೇಕು. ಯುವ ಜನಾಂಗ ಇಂತಹ ಕಾರ್ಯಾಗಾರದಲ್ಲಿ ಭಾಗವಹಿ ಸುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕಿದೆ ಎಂದರು.