ಇಂದಿರಾ ಕ್ಯಾಂಟೀನ್: ಸಿದ್ದು, ಜಾರ್ಜ್ ವಿರುದ್ಧದ ಪ್ರಕರಣ ರದ್ದು
Team Udayavani, Jun 5, 2020, 5:58 AM IST
ಬೆಂಗಳೂರು: ಇಂದಿರಾ ಕ್ಯಾಂಟೀನ್ ನಕಲಿ ಬಿಲ್ ಸೃಷ್ಟಿಸಿ ಅವ್ಯವಹಾರ ಎಸಗಿದ್ದಾರೆ ಎಂಬ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಪ್ರಕರಣ ರದ್ದುಗೊಳಿಸಿ ಆದೇಶಿಸಿದ್ದಾರೆ. ಗಣೇಶ್ ಸಿಂಗ್ ಎಂಬವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ದೂರು ದಾಖಲಿಸಿದ್ದರು.
ಆದರೆ, ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ. ರಾಜಕೀಯ ಉದ್ದೇಶದಿಂದ ದೂರು ನೀಡಿದ್ದಾರೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಕ್ಯಾಂಟೀನ್ ಕಾಮಗಾರಿ ಬಾಕಿ ಇರುವುದಕ್ಕೆ ಸಲ್ಲಿಸಿರುವ ಫೋಟೋ ಹಾಗೂ ವಿಡಿಯೋಗಳು ಯಾವಾಗ ಸೆರೆ ಹಿಡಿಯಲಾಗಿದೆ ಎಂಬುದಕ್ಕೆ ಖಚಿತ ಮಾಹಿತಿ ಇಲ್ಲ. ಊಟ ವಿತರಣೆಯ ಅವ್ಯವಹಾರಕ್ಕೆ ಸಲ್ಲಿಸಿರುವ ದಾಖಲೆಗಳು ಪೂರಕವಾಗಿಲ್ಲ. ಹೀಗಾಗಿ ಪ್ರಕರಣವನ್ನು ರದ್ದು ಮಾಡಲಾಗಿದೆ ಎಂದು ಆದೇಶದಲ್ಲಿ ವಿವರಿಸಿದ್ದಾರೆ.
ಏನಿದು ಪ್ರಕರಣ?: ಈ ಹಿಂದಿನ ಸರ್ಕಾರ 24 ಇಂದಿರಾ ಕ್ಯಾಂಟೀನ್ಗಳ ನಿರ್ಮಾಣವನ್ನು ಖಾಸಗಿ ಕಂಪನಿಗೆ ವಹಿಸಿತ್ತು. ಕಾಮಗಾರಿ ಪೂರ್ಣಗೊಳ್ಳದಿ ದ್ದರೂ ಕಂಪನಿಗೆ 11.72 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಕಂಪನಿ ಗಳು ಪ್ರತಿ ತಿಂಗಳು ಸಾರ್ವಜನಿಕರ ಮೂರು ಹೊತ್ತಿನ ಊಟದಿಂದ 2.96 ಕೋಟಿ ರೂ. ಸಂಗ್ರಹವಾಗಿ ದೆ ಎಂದು ಪಾಲಿಕೆಗೆ ತಪ್ಪು ಮಾಹಿತಿ ನೀಡಿವೆ ಎಂದು ಆರೋಪಿಸಿ ದೂರು ದಾಖಲಾಗಿತು.