ಮೇಲ್ಸೇತುವೆಗೆ ಸಾವರ್ಕರ್ ಹೆಸರು, ಆಕ್ಷೇಪ: ವಾಕ್ಸಮರ
Team Udayavani, May 28, 2020, 6:04 AM IST
ಬೆಂಗಳೂರು: ಯಲಹಂಕದ ಡೇರಿ ವೃತ್ತದ ನೂತನ ಮೇಲ್ಸೇತುವೆ ಉದ್ಘಾಟನೆ ಕಾರ್ಯ ಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಯಲಹಂಕ ದ ಡೇರಿ ವೃತ್ತದ ನೂತನ ಮೇಲ್ಸೇತುವೆಗೆ “ವೀರ ಸಾವರ್ಕರ್ ಮೇಲ್ಸೇತುವೆ’ ಹೆಸರು ನಾಮಕರಣ ಮಾಡುವ ಸಂಬಂಧ ಕೌನ್ಸಿಲ್ನಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಆಕ್ಷೇಪಣೆಯನ್ನು ಕೇಳಲಾಗಿದೆ.
ಸರ್ಕಾರವೂ ಈ ಬಗ್ಗೆ ಅಂತಿಮ ಆದೇಶ ನೀಡಬೇಕಿರುವ ಹಿನ್ನೆಲೆಯಲ್ಲಿ ಯಾವುದೇ ಹೆಸರನ್ನು ಅಂತಿಮ ಮಾಡಿಲ್ಲ ಎಂದರು. ಇನ್ನು ಕೊರೊನಾ ಭೀತಿ ಹಾಗೂ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿ ದೆ ಎಂದು ಆಯುಕ್ತರು ಸ್ಪಷ್ಟಪಡಿಸಿದರು. ಬುಧವಾರ ವಿವಿಧ ರಾಜಕೀಯ ಪಕ್ಷದ ನಾಯಕರು ಹಾಗೂ ಕೆಲವು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಬುಧವಾರದ ಸಂಜೆ ವೇಳೆಗೆ ಯಲಹಂಕದ ಡೇರಿ ವೃತ್ತದ ನೂತನ ಮೇಲ್ಸೇತುವೆ ಎಂದಷ್ಟೇ ನಾಮಕರಣ ಮಾಡಲು ಪಾಲಿಕೆ ಮುಂದಾಗಿತ್ತು. ಬಳಿಕ ನಿರ್ಧಾರ ಕೈಬಿಟ್ಟಿದೆ. ಗುರುವಾರ ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಉದ್ಘಾಟನೆ ಮಾಡಲು ಅಂತಿಮ ಸಿದಟಛಿತೆ ಮಾಡಿಕೊಳ್ಳಲಾಗಿತ್ತು. ಸದ್ಯ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕೊರೊನಾ ಭೀತಿ ನೆಪವೊಡ್ಡಿ ಕಾರ್ಯಕ್ರಮ ರದ್ದು ಮಾಡಲಾಗಿದೆ.
ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ: “ವೀರ ಸಾವರ್ಕರ್ ಮೇಲ್ಸೇತುವೆ’ ಹೆಸರು ನಾಮಕರಣ ಮಾಡುವ ಸಂಬಂಧ ಫೆ.29ರಂದು ನಡೆದ ಪಾಲಿಕೆಯ ಮಾಸಿಕ ಸಭೆಯಲ್ಲಿ ಆಡಳಿತ ಪಕ್ಷ ಸ್ವ- ನಿರ್ಣಯ ತೆಗೆದುಕೊಳ್ಳಲಾಗಿತ್ತು. ನೂತನ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು ನಾಮಕರಣಕ್ಕೆ ಸಂಬಂಧಿಸಿದಂತೆ ಮೇ 20 ರಂದು ಬಿಬಿಎಂಪಿ ಆಕ್ಷೇಪಣೆಗಳನ್ನು ಆಹ್ವಾನಿಸಿದೆ. ಆಕ್ಷೇಪಣೆ ಸಲ್ಲಿಸಲು ಜೂ 20 ವರೆಗೆ ಕಾಲಾವಕಾಶ ನೀಡಿದೆ.
ಈ ಹಂತದಲ್ಲಿ ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳನ್ನು ಪರಿಷ್ಕರಿಸಿ ಬಿಬಿಎಂಪಿಯು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಪರಿಷ್ಕೃತ ವರದಿಯ ಆಧಾರದ ಮೇಲೆ ಸರ್ಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಾವರ್ಕರ್ ಹೆಸರನ್ನು ನಾಮಕರಣ ಮಾಡಲು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವುದು ನಾಚಿಕೆ ಗೇಡಿನ ಸಂಗತಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರಿಂದ ವಾಗ್ಧಾಳಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹೆಸರನ್ನು ನಗರದ ಮೇಲ್ಸೇತುವೆಗೆ ಇಡುವ ಸಂಬಂಧ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿರುವುದು ಆಡಳಿತ ಹಾಗೂ ಪ್ರತಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ. ಕಾಂಗ್ರೆಸ್ ವಾಗ್ಧಾಳಿ ನಡೆಸಿದ್ದರೆ, ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಈ ನಿರ್ಧಾರ ಮಣ್ಣಿನ ಮಕ್ಕಳಿಗೆ ಮಾಡಿರುವ ಅವಮಾನ ಎಂದು ಆರೋಪಿಸಿದ್ದಾರೆ.
ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರಿಡುವಂತೆ ಆಗ್ರಹಿಸಿದ್ದಾರೆ. ಮಾಜಿ ಕೆಪಿಸಿಎ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೇಲ್ಮನೆ ಪ್ರತಿಪಕ್ಷದ ನಾಯಕ ಎಸ್.ಆರ್. ಪಾಟೀಲ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮೊದಲಾದ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗೆ ತಿರುಗೇಟು ನೀಡಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಾವರ್ಕರ್ ಹೆಸರು ಬದಲು ಸೋನಿಯಾ ಗಾಂಧಿ ಹೆಸರಿಡಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.
ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರೂ ನೇರವಾಗಿ ಸಿದ್ದರಾಮಯ್ಯ ವಿರುದಟಛಿ ವಾಗ್ಧಾಳಿ ನಡೆಸಿದ್ದು, ರಾಜ್ಯದ ವಿಶ್ವ ವಿದ್ಯಾಲಯಗಳು, ಆಸ್ಪತ್ರೆಗಳು, ರಸ್ತೆಗಳಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಹೆಸರಿಡುವಾಗ ಮಣ್ಣಿನ ಮಕ್ಕಳು ನೆನಪಾಗಲಿಲ್ಲವೇ ಎಂದು ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿಯ ಬಹುತೇಕ ನಾಯಕರು ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿದ್ದಾರೆ.