ಕಳಪೆ ಬಿತ್ತನೆ ಬೀಜ ಮಾರಿದಲ್ಲಿ ನಿರ್ದಾಕ್ಷಿಣ್ಯ ಕ್ರಮ
ಬಿತ್ತನೆ ಸಮಯದಲ್ಲಿ ಕಳಪೆ ಬೀಜ ನೀಡಿದರೆ ರೈತರ ಕೊಲೆಗೈದಂತೆ: ಕೃಷಿ ಸಚಿವ ಬಿ.ಸಿ. ಪಾಟೀಲ್
Team Udayavani, Apr 17, 2020, 11:10 AM IST
ದಾವಣಗೆರೆ: ತುಂಗಭದ್ರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಇತರರು ಭಾಗವಹಿಸಿದ್ದರು.
ದಾವಣಗೆರೆ: ಕಳಪೆ ಬಿತ್ತನೆ ಬೀಜ ಮಾರಾಟಗಾರರ ವಿರುದ್ಧ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಕೊರೊನಾ ವೈರಸ್ ನಿಯಂತ್ರಣ ಹಾಗೂ ರೈತರಿಗೆ ಮಾರುಕಟ್ಟೆ ಒದಗಿಸುವ ಕುರಿತು ಕರೆಯಲಾಗಿದ್ದ ವಿವಿಧ ಇಲಾಖೆ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬಿತ್ತನೆ ಸಮಯದಲ್ಲಿ ಕಳಪೆ ಬೀಜ ವಿತರಿಸಿದರೆ ರೈತರನ್ನು ಕೊಲೆ ಮಾಡಿದಂತಾಗುತ್ತದೆ. ಕಳಪೆ ಬಿತ್ತನೆ ಬೀಜ ಮಾರಾಟಗಾರರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಸಹ ಅವರ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್ ಕೇಸ್ ದಾಖಲಿಸಿ ಅಂಗಡಿ ಪರವಾನಗಿ ರದ್ದುಪಡಿಸಲಾಗುವುದು ಎಂದರು.
ಕಳಪೆ ಬೀಜ ಮಾರಾಟಗಾರರ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ರಾಜ್ಯ ಮಟ್ಟದಲ್ಲಿ ತಂಡ ರಚಿಸಲಾಗಿದ್ದು, ಈ ತಂಡವು ಜಿಲ್ಲೆಗೆ ಬರುವತನಕ ಜಿಲ್ಲಾಮಟ್ಟದ ಅಧಿಕಾರಿಗಳು ಕಳಪೆ ಬೀಜ ಮಾರಾಟಗಾರರನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಜಿಲ್ಲಾಮಟ್ಟದ ಅಧಿಕಾರಿಗಳು ವಿಫಲರಾದಲ್ಲಿ ನೇರವಾಗಿ ಅಧಿಕಾರಗಳನ್ನೇ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಬಳ್ಳಾರಿ, ಕೊಪ್ಪಳ ಜಿಲ್ಲೆ ಸೇರಿದಂತೆ 75 ಸಾವಿರ ಎಕರೆ ಪ್ರದೇಶದಲ್ಲಿ ಆಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆ ಹಾನಿಗಿಡಾಗಿದೆ. ಈ ಹಿನ್ನೆಲೆಯಲ್ಲಿ ಎನ್ಡಿಆರ್ಎಫ್ ಅನುದಾನದಡಿ 47 ಕೋಟಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಅಧಿಕಾರಿಗಳು ಜಿಪಿಎಸ್ ಸರ್ವೆ ಮಾಡಿದರೆ ಸಾಲದು, ಸ್ವತಃ ರೈತರ ಜಮೀನಿಗೆ ತೆರಳಿ ಪರಿಶೀಲಿಸಿ ಪರಿಹಾರ ವಿತರಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲೆಯಲ್ಲಿ ಒಟ್ಟು ಮೂರು ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಮೂವರು ಸಹ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಏ.17ಕ್ಕೆ 28 ದಿನಗಳು ಮುಗಿಯಲಿದ್ದು, ಯಾವುದೇ ಹೊಸ ಪ್ರಕರಣಗಳು ಕಂಡು ಬರದಿದ್ದಲ್ಲಿ ಜಿಲ್ಲೆ ಗ್ರೀನ್ ಝೋನ್ಗೆ ಸೇರ್ಪಡೆಯಾಗಲಿದೆ ಎಂದು ತಿಳಿಸಿದರು.
ಜಂಟಿ ಕೃಷಿನಿರ್ದೇಶಕ ಶರಣಪ್ಪ ಮುದಗಲ್ ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದಾದ ಬೆಳೆಹಾನಿ, ಗೊಬ್ಬರ, ಬಿತ್ತನೆ ಬೀಜದ ದಾಸ್ತಾನು, ಕೃಷಿ ಚಟುವಟಿಕೆ ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮೀಕಾಂತ ಬೊಮ್ಮನ್ನಾರ, ಜಿಲ್ಲೆಯಲ್ಲಿ ತರಕಾರಿ ಹಾಗೂ ಹಣ್ಣು ಬೆಳೆದ ರೈತರಿಗೆ ಕಲ್ಪಿಸರವ ಮಾರುಕಟ್ಟೆ ಸೌಲಭ್ಯ, ಸಹಾಯವಾಣಿ ಆರಂಭಿಸಿರುವ ಬಗ್ಗೆ ತಿಳಿಸಿದರು.
ಕೃಷಿ ಬೆಳೆಗಳ ಮಾರಾಟ ಸಂಘದ ಅಧ್ಯಕ್ಷ ಮುರುಗೇಶಪ್ಪ ಮಾತನಾಡಿ, ಲಾಕ್ ಡೌನ್ನಿಂದಾಗಿ ರೈತರ ಬೆಳೆಗೆ ಮಾರುಕಟ್ಟೆ ಲಭಿಸದ ಹಿನ್ನೆಲೆಯಲ್ಲಿ ಸ್ವತಃ ನೇರವಾಗಿ ರೈತರಿಂದ ತರಕಾರಿ ಹಣ್ಣುಗಳನ್ನು ಖರೀದಿಸಿ, ನಗರದ ನಾಗರಿಕರಿಗೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾಗಾಟ ವೆಚ್ಚ ಅಧಿಕವಾಗಿದ್ದು, ಪರಿಹಾರಕ್ಕಾಗಿ ಸಚಿವರಿಗೆ ಮನವಿ ಮಾಡಿದರು. ಸಂಸದ ಜಿ.ಎಂ. ಸಿದ್ದೇಶ್ವರ್, ಸಾಗಾಟ ವೆಚ್ಚಕ್ಕೆ ತಗಲುವ ವಾಹನ ಬಾಡಿಗೆ ನೀಡುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಕೋವಿಡ್-19 ರೋಗ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿಗಳ ಪರಿಹಾರ ನಿ ಧಿಗೆ 5 ಲಕ್ಷ ರೂ. ಚೆಕ್ ಅನ್ನು ಕೃಷಿ ಸಚಿವರಿಗೆ ನೀಡಲಾಯಿತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಪ್ರೊ.ಎನ್.ಲಿಂಗಣ್ಣ, ಎಸ್ .ವಿ.ರಾಮಚಂದ್ರ, ಎಸ್.ಎ. ರವೀಂದ್ರನಾಥ್, ಜಿಪಂ ಅಧ್ಯಕ್ಷೆ ಯಶೋದಮ್ಮ, ಮೇàಯರ್ ಅಜಯಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಜಿಲ್ಲಾ ಪೋಲೀಸ್ ವರಿಷ್ಠಾಕಾರಿ ಹನುಮಂತರಾಯ ಇತರರು ಸಭೆಯಲ್ಲಿದ್ದರು.