ಅಂತರ್ಜಲ ಹೆಚ್ಚಳಕ್ಕೆ ಪ್ರಯತ್ನ : ಮಾಡಾಳ್
Team Udayavani, Mar 20, 2022, 11:00 AM IST
ಚನ್ನಗಿರಿ: ತಾಲೂಕಿನಲ್ಲಿ ಕುಡಿಯುವ ನೀರಿಗೆ ತೊಂದರೆ ಇಲ್ಲ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು. ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು, ಚೆಕ್ಡ್ಯಾಂಗಳನ್ನು ನಿರ್ಮಿಸಲು ಮತ್ತು ಸ್ತ್ರೀಶಕ್ತಿ ಗುಂಪುಗಳಿಗೆ ಸಹಾಧನ ನೀಡಲು ಜಲಾನಯನ ಇಲಾಖೆಯಿಂದ 14 ಕೋಟಿ ರೂ. ಅನುದಾನ ಮಂಜೂರಾಗಿದೆ. ಕಾಮಗಾರಿ ಕೆಲಸಗಳು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದರು. ಹೊದಿಗೆರೆ ಗ್ರಾಮದಲ್ಲಿ 9066 ಜನ ಸಾಗುವಳಿ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ಅದಷ್ಟು ಶೀಘ್ರದಲ್ಲಿಯೇ ಹಕ್ಕುಪತ್ರಗಳನ್ನು ವಿತರಿಸಲಾಗುವುದು. ಅಕ್ರಮ-ಸಕ್ರಮ ಯೋಜನೆಯಲ್ಲಿ 65 ಜನ ಫಲಾನುಭವಿಗಳಿಗೆ 65 ಟಿಸಿಗಳನ್ನು ನೀಡಲಾಗಿದೆ. 840 ಜನ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿದ್ದು ಪ್ರತಿ ತಿಂಗಳು 7.98 ಲಕ್ಷ ರೂ. ನೇರವಾಗಿ ಇವರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ಸಣ್ಣ ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯಲ್ಲಿ 550 ಜನ ರೈತರಿಗೆ 1.25 ಕೋಟಿ ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಡಾ| ಪಟ್ಟರಾಜ ಗೌಡ ಮಾತನಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಣುಕಮ್ಮ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷ ಯೋಗೇಂದ್ರಪ್ಪ, ತಾಪಂ ಕಾರ್ಯನಿರ್ವಹಣಾಧಿ ಕಾರಿ ಪ್ರಕಾಶ್, ಸಿಪಿಐ ಪಿ.ಬಿ. ಮಧು, ಕ್ಷೇತ್ರ ಶಿಕ್ಷಣಾಧಿ ಕಾರಿ ಮಂಜುನಾಥ್, ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ್ ಮಲ್ಲಾಡದ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಭಿಯಂತರ ಲೋಹಿತ್, ಬೆಸ್ಕಾಂ ಅಭಿಯಂತರ ಲೋಹಿತ್, ಲೋಕೋಪಯೋಗಿ ಇಲಾಖೆ ಅಭಿಯಂತರ ರವಿಕುಮಾರ್, ಪ್ರಕಾಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.