ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸಿ: ಸಲೀಂ ಅಹಮ್ಮದ್
Team Udayavani, May 29, 2020, 5:23 AM IST
ಮೈಸೂರು: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸುವ ಕೆಲಸ ಆರಂಭವಾಗಬೇಕು. ಪಕ್ಷದ ವಿಚಾರ, ಅಭಿವೃದಿಟಛಿ ಕಾರ್ಯವನ್ನು ಜನರ ಮುಂದಿಡುವ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸುವ ಹಿನ್ನೆಲೆಯಲ್ಲಿ ನಡೆದ ಎಲ್ಲಾ ಹಂತದ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ, ಕೊರೊನಾದಿಂದ ಪಕ್ಷದ ನಾಯಕರು, ಮುಖಂಡರು ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದರಿಂದ ಬೂತ್, ಗ್ರಾಪಂ ಮಟ್ಟದಲ್ಲಿ ಕಾರ್ಯಕ್ರಮ ನಡೆಸುವ ಮೂಲಕ ರಾಜ್ಯದ ಎಲ್ಲಾ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಬೇಕಿದೆ ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿ ಜೂ.7ರಂದು ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುವ ವೇಳೆ ರಾಜ್ಯದ ಪ್ರತಿಯೋಬ್ಬ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಮಾಧ್ಯಮದ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು. ಜೂಮ್ ಆ್ಯಪ್ ಬಳಕೆ ಮಾಡುವ ಕಾರ್ಯಕರ್ತರು, ಡಿಕೆಶಿ ಅವರ ಪದಗ್ರಹಣ ಕಾರ್ಯಕ್ರಮದ ವೀಕ್ಷಣೆ ಮಾಡಬೇಕು. ಅಲ್ಲದೆ, ತಾವು ಕೂಡ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು ಎಂದರು.
ಸಭೆಯಲ್ಲಿ ಮಾಜಿ ಶಾಸಕ ವಾಸು, ಮಾಜಿ ಸಂಸದ ಧ್ರುವನಾರಾಯಣ್, ಮಾಜಿ ಸಚಿವ ಡಾ.ಎಚ್ .ಸಿ.ಮಹದೇವಪ್ಪ, ಮಾಜಿ ಶಾಸಕ ಕೆ. ವೆಂಕಟೇಶ್, ಶಾಸಕರಾದ ಎಚ್.ಪಿ. ಮಂಜುನಾಥ್, ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಎಂ.ಕೆ. ಸೋಮಶೇಖರ್, ಜಿಪಂ ಮಾಜಿ ಅಧ್ಯಕ್ಷ ಕೆ. ಮರಿಗೌಡ, ಡಿ.ರವಿಶಂಕರ್, ನಗರ ಅಧ್ಯಕ್ಷ ಆರ್. ಮೂರ್ತಿ, ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಶ್ರೀನಾಥ್ ಬಾಬು ಇದ್ದರು.