ಲಾಕ್ಡೌನ್ ಅವಧಿಯ ವೇತನ ಕೊಡಿ
Team Udayavani, Jul 9, 2020, 5:15 AM IST
ಮೈಸೂರು: ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್ಡೌನ್ ಅವಧಿ ವೇತನ ಮತ್ತು ಕೆಲಸ ನೀಡುವಂತೆ ಆಗ್ರಹಿಸಿ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ ನಡೆದ ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಮುದ್ದುಕೃಷ್ಣ ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಸತಿ ನಿಲಯಗಳಲ್ಲಿ ಕಳೆದ 17-18 ವರ್ಷಗಳಿಂದಲೂ ನೂರಾರು ಹೊರಗುತ್ತಿಗೆ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಲಾಕ್ಡೌನ್ ಜಾರಿಯಾದ ಮೇಲೆ ವೇತನ ನೀಡಿಲ್ಲ. ಇದರಿಂದಾಗಿ ಎಷ್ಟೋ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ ಎಂದು ದೂರಿದರು. ಈ ಬಗ್ಗೆ ಈ ಹಿಂದೆಯೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
ಆರ್ಥಿಕ ಇಲಾಖೆ ಜೂ.10ರಂದು ಹೊರಡಿಸಿರುವ ಆದೇಶದ ಪ್ರಕಾರ ಸರ್ಕಾರದ ವಿವಿಧ ಇಲಾಖೆಗಳು, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಕಾರ್ಮಿಕರಿಗೆ ವೇತನ ಪಾವತಿ ಮಾಡಬೇಕು ಎಂದು ಆಗ್ರಹಿಸಿದರು. ವಸತಿ ಶಾಲೆ, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಎಲ್ಲಾ ಹೊರಗುತ್ತಿಗೆ ಕಾರ್ಮಿಕರಿಗೂ ಲಾಕ್ ಡೌನ್ ಅವಧಿಯ ವೇತನ ಪಾವತಿಸಬೇಕು,
ಇಪಿಎಫ್ ಪಾವತಿಸಿರುವ ಕುರಿತು ಮಾಹಿತಿ ನೀಡಬೇಕು, 4 ವರ್ಷಗಳ ಹಿಂಬಾಕಿ ವೇತನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಎಐಯುಟಿಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ, ರವಿ, ಲೋಕೇಶ್, ಮಹದೇವಮ್ಮ, ಯಾಂದಳ್ಳಿ, ನಾಗರತ್ನ ಇತರರಿದ್ದರು.