BJP- JDS 28 ಸ್ಥಾನಗಳಲ್ಲೂ ಗೆಲ್ಲುವುದು ಖಚಿತ: ವಿಜಯೇಂದ್ರ
Team Udayavani, Feb 1, 2024, 1:07 AM IST
ಚಿಕ್ಕಮಗಳೂರು: ರಾಜ್ಯದ ಎಲ್ಲ 28 ಲೋಕಸಭೆ ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲುವು ಸಾಧಿ ಸುವುದು ನಿಶ್ಚಿತವಾಗಿದ್ದು, ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂಥ ದಿನ ಸೃಷ್ಟಿ ಮಾಡಲಿದೆ. ಕಾಂಗ್ರೆಸ್ ವಿಳಾಸವೇ ಇಲ್ಲದಂತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಗರದಲ್ಲಿ ಬುಧವಾರ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆಂಬ ಭ್ರಮೆಯಲ್ಲಿದ್ದಾರೆ. ಅವರ ಮಾತಿಗೆ ಜನ ಮರಳಾಗುವುದಿಲ್ಲ. ಎಲ್ಲ 28 ಸ್ಥಾನಗಳಲ್ಲಿ ಗೆಲುವು ಸಾ ಧಿಸುತ್ತೇವೆ ಎಂದರು.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದ್ದು, 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ರಾಜ್ಯ ಸರಕಾರ ರೈತರ ನೆರವಿಗೆ ಧಾವಿಸದೆ ರೈತ ವಿರೋಧಿ ಯಾಗಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.
ಸಿದ್ದು ಹೃದಯದಲ್ಲಿ ಟಿಪ್ಪು
ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಜಾತಿಗಳ ನಡುವೆ ಒಡೆದಾಳುವ ನೀತಿ ಅನುಸರಿಸುತ್ತಿದೆ. ಸಿದ್ದರಾಮಯ್ಯರಿಗೆ ಕೇಸರಿ ಬಣ್ಣ ಕಂಡರೆ ಆಗುವುದಿಲ್ಲ. ಅವರ ಹೆಸರಿನಲ್ಲಿ ರಾಮ ಇರಬಹುದು, ಆದರೆ ಹೃದಯದಲ್ಲಿ ಟಿಪ್ಪು ಸುಲ್ತಾನ್ ಇದ್ದಾನೆ ಎಂದು ಲೇವಡಿ ಮಾಡಿದರು.
ಮಂಡ್ಯದ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಅನೇಕ ವರ್ಷಗಳಿಂದ ಹನುಮಧ್ವಜ ಹಾರಿಸಲಾಗುತ್ತಿತ್ತು. ಅಲ್ಲಿನ ಗ್ರಾಮಸ್ಥರು ಹಣ ಸಂಗ್ರಹಿಸಿ ಧ್ವಜಸ್ತಂಭ ನಿರ್ಮಿಸಿ ಹನುಮಧ್ವಜ ಹಾರಿಸಿದ್ದರು. ಸರಕಾರ ಅದಕ್ಕಿಂತ ದೊಡ್ಡ ಧ್ವಜಸ್ತಂಭ ನಿರ್ಮಿಸಿ ರಾಷ್ಟ್ರಧ್ವಜ ಹಾರಿಸಿದ್ದರೆ ಸರಕಾರದ ಮೇಲಿನ ಗೌರವ ಇನ್ನಷ್ಟು ಹೆಚ್ಚುತ್ತಿತ್ತು. ಹನುಮ ಧ್ವಜವನ್ನು ಕೆಳಗಿಳಿಸಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ಮಾಡಲಾಗಿದೆ ಎಂದು ಆರೋಪಿಸಿದರು. ಸಿ.ಟಿ.ರವಿ, ಪ್ರಮೋದ್ ಮಧ್ವರಾಜ್, ಬೆಳ್ಳಿಪ್ರಕಾಶ್, ಡಿ.ಎಸ್. ಸುರೇಶ್, ಎಂ.ಕೆ.ಪ್ರಾಣೇಶ್ ಮುಂತಾದವರಿದ್ದರು.