Congress ಅಧಿಕಾರಕ್ಕೆ ಬಂದರೆ ಛತ್ತೀಸ್ಗಢದಲ್ಲೂ ಗೃಹ ಲಕ್ಷ್ಮಿ ಯೋಜನೆ ಜಾರಿ: ಪ್ರಿಯಾಂಕಾ
Team Udayavani, Nov 14, 2023, 5:30 PM IST
ರಾಯ್ಪುರ: ಮುಂಬರುವ ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದಂತೆಯೇ ಛತ್ತೀಸ್ಗಢದಲ್ಲಿಯೂ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಿಸಿದ್ದಾರೆ.
ಛತ್ತೀಸ್ಗಢದಲ್ಲಿ 70 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಚುನಾವಣಾ ಕದನಕ್ಕೆ ದುಮುಕಿದ್ದಾರೆ. ರಾಜ್ಯದಲ್ಲಿ ತನ್ನ ‘ಗೃಹ ಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು “‘ಗೃಹ ಲಕ್ಷ್ಮಿ ಯೋಜನೆ’ ಅನ್ನು ಛತ್ತೀಸ್ಗಢದಲ್ಲಿಯೂ ಜಾರಿಗೆ ತರಲಾಗುವುದು. ಈ ಯೋಜನೆ ಅಡಿ ವರ್ಷಕ್ಕೆ 15,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ಜಮೆ ಮಾಡಲಾಗುವುದು. ಇದರೊಂದಿಗೆ ಪ್ರತಿ ಎಲ್ಪಿಜಿ ಸಿಲಿಂಡರ್ 500 ರೂ. ಸಬ್ಸಿಡಿ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಸ್ವ-ಸಹಾಯ ಗುಂಪುಗಳು ಮತ್ತು ಸಕ್ಷಮ್ ಯೋಜನೆಗಳ ಸಾಲಗಳನ್ನು ಮನ್ನಾ ಮಾಡಲಾಗುವುದು. ಛತ್ತೀಸ್ಗಢದ ಕಾಂಗ್ರೆಸ್ ಸರ್ಕಾರ, ರೈತರು, ಕಾರ್ಮಿಕರು, ಮಹಿಳೆಯರು, ಆದಿವಾಸಿಗಳು, ದಲಿತರು ಮತ್ತು ಬಡವರ ಸಮೃದ್ಧಿಯ ಮಾದರಿಯನ್ನು ಪ್ರಸ್ತುತಪಡಿಸಿದೆ ಎಂದು ಅವರು ಹೇಳಿದ್ದಾರೆ.