ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು
Team Udayavani, Jul 29, 2019, 5:25 AM IST
ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಸೋಮವಾರ ಪಕ್ಷದ ಶಾಸಕಾಂಗ ಸಭೆ ಕರೆದಿದ್ದು, ಪಕ್ಷದ ಶಾಸಕರು, ಮೇಲ್ಮನೆ ಸದಸ್ಯರು, ಲೋಕಸಭೆ, ರಾಜ್ಯ ಸಭೆ ಸದಸ್ಯರು ಭಾಗವಹಿಸುವಂತೆ ಸೂಚಿಸಿದ್ದಾರೆ.
ವಿಧಾನ ಸೌಧದ ಪಕ್ಷದ ಶಾಸಕಾಂಗ ಕೊಠಡಿಯಲ್ಲಿ ಸೋಮವಾರ ಬೆಳಗ್ಗೆ 9 ಗಂಟೆಗೆ ಸಭೆ ನಡೆಯಲಿದೆ. ವಿಧಾನಸಭೆ ಪ್ರತಿಪಕ್ಷ ನಾಯಕನಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡುವಂತೆ ಕೆಪಿಸಿಸಿಗೆ ಹೈಕಮಾಂಡ್ ನಿರ್ದೇಶನ ನೀಡಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಪ್ರತಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಅಲ್ಲದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಹುಮತ ಸಾಬೀತು ಪಡಿಸಬೇಕಿರುವುದರಿಂದ ಹಾಗೂ ಧನ ವಿನಿಯೋಗ ಮಸೂದೆಯೂ ಸೋಮವಾರವೇ ಮಂಡನೆಯಾಗುವುದರಿಂದ ಪಕ್ಷದ ಶಾಸಕರು ಕಡ್ಡಾಯವಾಗಿ ಹಾಜರಿದ್ದು, ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಸಿದ್ದರಾಮಯ್ಯ ವಿಪ್ ಜಾರಿಗೊಳಿಸುವ ಸಾಧ್ಯತೆಯಿದೆ.