ಖಾತೆ ಬದಲಾವಣೆಯಿಂದ ಯಾವುದೇ ಸಮಸ್ಯೆ ಇಲ್ಲ: ಡಿಸಿಎಂ
Team Udayavani, Feb 13, 2020, 7:43 PM IST
ಶಿವಮೊಗ್ಗ: “ಖಾತೆ ಹಂಚಿಕೆ ಬಳಿಕ ನೂತನ ಸಚಿವರ ಮನವಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕೆಲ ಖಾತೆ ಬದಲಾಯಿಸಿಕೊಟ್ಟಿದ್ದಾರೆ. ಹೀಗಾಗಿ ಯಾವುದೇ ಸಮಸ್ಯೆ ಇಲ್ಲ’ ಎಂದು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಸ್ವಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರೂ ತೃಪ್ತಿಯಿಂದಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಕೆಲಸವನ್ನು ಸಿಎಂ ಯಶಸ್ವಿಯಾಗಿ ಮಾಡಿದ್ದಾರೆಂದರು.
ಎಲ್ಲರಿಗೂ ಸಚಿವರಾಗಬೇಕೆಂಬ ಆಸೆ ಇರುತ್ತದೆ. ಮುಖ್ಯಮಂತ್ರಿಗಳು ಸೂಕ್ತ ಸಂದರ್ಭದಲ್ಲಿ ಕ್ರಮ ಕೈಗೊಳ್ಳುತ್ತಾರೆ. ಸೋತವರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ನಿರ್ಧರಿಸುತ್ತಾರೆ ಎಂದರು.
ಶಿವಮೊಗ್ಗಕ್ಕೂ, ತನಗೂ ತುಂಬಾ ಹಳೆಯ ನಂಟಿದೆ. ಪ್ರೌಢಶಾಲೆ ಹಾಗೂ ಪಿಯುಸಿಯನ್ನು ಇಲ್ಲೇ ಓದಿದ್ದರಿಂದ ವಿಶೇಷ ಒಲವಿದೆ. ಮುಖ್ಯಮಂತ್ರಿಗಳು ಜಿಲ್ಲೆಯನ್ನು ಹೆಚ್ಚು ಅಭಿವೃದ್ಧಿ ಮಾಡಬೇಕೆಂಬ ಕನಸು ಹೊಂದಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕೂಡ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಶಿಕ್ಷಣ, ಕೌಶಲ್ಯವಿದ್ದಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯವಿದೆ.
ಅದಕ್ಕಾಗಿಯೇ ಶಿಕ್ಷಣ-ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.