ಸುರಕ್ಷಿತ ನಗರ ಯೋಜನೆ ಎಲ್ಲ ತಾಲೂಕಿಗೂ ವಿಸ್ತರಣೆ: ಸಿಎಂ
Team Udayavani, Mar 9, 2023, 6:15 AM IST
ಬೆಂಗಳೂರು: ಮಹಿಳೆಯರ ಸುರಕ್ಷೆಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸುರಕ್ಷಿತ ನಗರ ಯೋಜನೆಯನ್ನು (ಸೇಫ್ ಸಿಟಿ ಪ್ರಾಜೆಕ್ಟ್) ರಾಜ್ಯದ ತಾಲೂಕು ಕೇಂದ್ರ ಹಾಗೂ ಎಲ್ಲಾ ಮಹಾನಗರ ಪಾಲಿಕೆಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ “ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯ ಕ್ರಮವನ್ನು ಉದ್ಘಾಟಿಸಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನಿಸಿ ಮಾತನಾಡಿ, ಮಹಿಳೆಯ ಸುರಕ್ಷೆಗೆ ನಮ್ಮ ಸರಕಾರ ವ್ಯವಸ್ಥೆ ಕಲ್ಪಿಸಿದ್ದು, ಸುರಕ್ಷಿತ ನಗರ ಯೋಜನೆಗೆ ಚಾಲನೆ ನೀಡಲಾಗಿದೆ.
7,000 ಸಿಸಿ ಕೆಮರಾ ಅಳವಡಿಸಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. 400 ವಾಹನಗಳನ್ನು ಒದಗಿಸಲಾಗಿದೆ. ಈ ಯೋಜನೆಯನ್ನು ತಾಲೂಕು ಕೇಂದ್ರ ಹಾಗೂ ಎಲ್ಲ ಮಹಾ ನಗರ ಪಾಲಿಕೆಗಳಿಗೆ ವಿಸ್ತರಣೆ ಮಾಡ ಲಾಗುವುದು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಸಾಲು ಮರದ ತಿಮ್ಮಕ್ಕ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಮುಂತಾದವರಿದ್ದರು.
ಸಾಧಕಿಯರಿಗೆ ಪ್ರಶಸ್ತಿ ಪ್ರದಾನ
ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅತ್ಯುತ್ತಮ ಸ್ತ್ರೀ ಶಕ್ತಿ ಗುಂಪುಗಳಿಗೆ ಯಶೋಧರಮ್ಮ ದಾಸಪ್ಪ ಸ್ಮರಣಾರ್ಥ ಪ್ರಶಸ್ತಿ ಹಾಗೂ 31 ಅಂಗನವಾಡಿ ಕಾರ್ಯ ಕರ್ತೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಿಷನ್ ಶಕ್ತಿ ಯೋಜನೆ ಪೋಸ್ಟರ್, ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಸಮರ್ಪಕ ಅನುಷ್ಠಾನದ ಮೇಲ್ವಿಚಾರಣೆಯಾಗಿ ಎನ್ಐಸಿ ಸಹಯೋಗದೊಂದಿಗೆ ರೂಪಿಸಲಾಗಿರುವ ಸುರಕ್ಷಿಣಿ ವೆಬ್ ಪೋರ್ಟಲ್ ಅನ್ನು ಸಿಎಂ ಬೊಮ್ಮಾಯಿ ಬಿಡುಗಡೆಗೊಳಿಸಿದರು.