ದುಬೈನಿಂದ ಬಂದ ವ್ಯಕ್ತಿಗೆ ಕೊರೊನಾ:ಒಮಿಕ್ರಾನ್ ಭೀತಿ; ಮಾಸ್ಕ್ ಧರಿಸದಿದ್ದರೆ ದಂಡ
Team Udayavani, Dec 8, 2021, 11:45 AM IST
ಕಲಬುರಗಿ: ಕೊರೊನಾ ಮತ್ತು ಅದರ ರೂಪಾಂತರ ಒಮಿಕ್ರಾನ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಜಾರಿಗೊಳಿಸಿದ್ದು, ಅದರಂತೆ ಜಿಲ್ಲೆಯಲ್ಲಿ ಮಾರ್ಗಸೂಚಿ ಪಾಲನೆಯೊಂದಿಗೆ ಸಭೆ-ಸಮಾರಂಭಗಲ್ಲಿ 500 ಜನ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಿ ಜಿಲ್ಲಾ ಧಿಕಾರಿ ವಿ.ವಿ.ಜ್ಯೋತ್ಸ್ನಾ ಆದೇಶ ಹೊರಡಿಸಿದ್ದಾರೆ.
ಮಾಸ್ಕ್ ಧರಿಸುವಿಕೆಯೇ ಅತ್ಯವಶ್ಯಕವಾದ ಸೋಂಕು ನಿಯಂತ್ರಣದ ಕ್ರಮವಾಗಿದೆ. ಯಾವುದೇ ವ್ಯಕ್ತಿ ಮಾಸ್ಕ್ ಧರಿಸದಿದ್ದಲ್ಲಿ ನಗರ ಪಾಲಿಕೆ ಪ್ರದೇಶಗಳಲ್ಲಿ 250ರೂ. ಹಾಗೂ ಇನ್ನಿತರ ಪ್ರದೇಶಗಳಲ್ಲಿ 100ರೂ.ಗಳ ದಂಡ ವಿ ಧಿಸಲಾಗುವುದು. ಜಿಲ್ಲೆಯ ಮಹಾರಾಷ್ಟ್ರ ರಾಜ್ಯಗಳಿಗೆ ಹೊಂದಿಕೊಂಡಿರುವ ಚೆಕ್ಪೋಸ್ಟ್ಗಳಲ್ಲಿ ಹೆಚ್ಚಿನ ಕಣ್ಗಾವಲು ಇರಿಸುವುದನ್ನು ಮುಂದುವರಿಸಲಾಗಿದೆ ಎಂದು ಹೇಳಿದ್ದಾರೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳು, ಹಬ್ಬಗಳು ಹಾಗೂ ಸಮಾರಂಭಗಳನ್ನು ಮುಂಜಾಗ್ರತವಾಗಿ ಜನವರಿ 15ರ ವರೆಗೆ ಮುಂದೂಡುವಂತೆ ಸೂಚನೆ ನೀಡಲಾಗಿದೆ.
ಶಾಲೆ-ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆಯಬೇಕು ಎಂದು ತಿಳಿಸಿದ್ದಾರೆ. ಪರೀಕ್ಷೆ-ಪತ್ತೆ-ಚಿಕಿತ್ಸೆ-ಲಸಿಕಾಕರಣ ಮತ್ತು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುರಿಸಬೇಕು. ಸೋಂಕು ಹರಡುವುದನ್ನು ತಡೆಗಟ್ಟಲು ಹೆಚ್ಚಿನ ಪ್ರಕರಣಗಳು ಕಂಡು ಬರುವ ವಲಯ, ಪ್ರದೇಶಗಳಲ್ಲಿ ಕಠಿಣವಾದ ಸೂಕ್ಷ್ಮನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು, 65 ವರ್ಷ ಮೀರಿದ ಹಿರಿಯ ನಾಗರಿಕರು ಹಾಗೂ ಸಹವರ್ತಿ ರೋಗಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸರ್ಕಾರದಿಂದ ಕಡ್ಡಾಯವಾಗಿ ತಪಾಸಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ಸರ್ಕಾರಿ ನೌಕರರು ಎರಡು ಡೋಸ್ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು. ಎರಡು ಡೋಸ್ ಲಸಿಕೆ ಪಡೆದಿರುವ ವ್ಯಕ್ತಿಗಳಿಗೆ ಮಾತ್ರ ಮಾಲ್ಗಳು, ಸಿನಿಮಾ ಹಾಲ್ ಹಾಗೂ ಚಿತ್ರ ಮಂದಿರಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ದುಬೈನಿಂದ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್
ದುಬೈನಿಂದ ಕಲಬುರಗಿ ನಗರಕ್ಕೆ ಆಗಮಿಸಿದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಸೋಂಕು ಪತ್ತೆಯಾಗಿದ್ದು, ರೂಪಾಂತರಿ ಒಮಿಕ್ರಾನ್ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಜಿನೋಮ್ ಸಿಕ್ವೆನ್ಸಿಂಗ್ ಪರೀಕ್ಷೆಗಾಗಿ ಬೆಂಗಳೂರಿಗೆ ಗಂಟಲು ದ್ರವಣ ಮಾದರಿ ರವಾನಿಸಲಾಗಿದೆ.
ಇಲ್ಲಿನ ತಾಜನಗರದ 36 ವರ್ಷದ ನಿವಾಸಿ ದುಬೈನಿಂದ ಮರಳಿ ಬಂದಿದ್ದು, ಕಳೆದ ಡಿ.3ರಂದು ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಆದ್ದರಿಂದ ಜಿಮ್ಸ್ ಆಸ್ಪತ್ರೆಯಲ್ಲಿ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದೇಶದಿಂದ ಬಂದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಒಮಿಕ್ರಾನ್ ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ. ವಿದೇಶದಿಂದ ಬರುವವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಕಡ್ಡಾಯವಾಗಿ ಒಮಿಕ್ರಾನ್ ಪರೀಕ್ಷೆ ಮಾಡಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ.
ದುಬೈಯಿಂದ ಬಂದಿರುವ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೆ, ಈತನಿಗೆ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲ. ಈತನ ಕುಟುಂಬದ ಹತ್ತು ಜನರಿಗೂ ಕೊರೊನಾ ಪತ್ತೆ ಪರೀಕ್ಷೆ ಮಾಡಲಾಗಿದ್ದು, ಎಲ್ಲರಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ. ಈತ ವಿದೇಶದಿಂದ ಆಗಮಿಸಿರುವ ಹಿನ್ನೆಲೆಯಲ್ಲಿ ಗಂಟಲು ದ್ರವ ಮಾದರಿಯನ್ನು ಬೆಂಗಳೂರಿನ ಸಿಕ್ವೆನ್ಸಿಂಗ್ ಲ್ಯಾಬ್ಗ ಕಳುಹಿಸಲಾಗಿದೆ. ಈ ವರದಿ ಬಂದ ಬಳಿಕವೇ ನಿಖರ ಮಾಹಿತಿ ತಿಳಿಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಶರಣಬಸಪ್ಪ ಗಣಜಲಖೇಡ ಸ್ಪಷ್ಟಪಡಿಸಿದ್ದಾರೆ.
ಒಮಿಕ್ರಾನ್ ಭೀತಿ ಶುರುವಾದ ಬಳಿಕ ಇಲ್ಲಿಯ ವರೆಗೆ ವಿದೇಶದಿಂದ ಹೈದ್ರಾಬಾದ್ ವಿಮಾನ ನಿಲ್ದಾಣದ ಮೂಲಕ ಸುಮಾರು 25 ಜನರು ನಗರಕ್ಕೆ ಆಗಮಿಸಿದ್ದಾರೆ. ಇವರಲ್ಲಿ ಈ ವ್ಯಕ್ತಿಯನ್ನು ಹೊರತು ಪಡಿಸಿ ಬೇರ್ಯಾರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿಲ್ಲ ಎಂದು ತಿಳಿದು ಬಂದಿದೆ. ಲ್ಯಾಬ್ ಮೇಲ್ದರ್ಜೆಗೆ: ಕೊರೊನಾ ಮಹಾಮಾರಿ ರೂಪಾಂತರಿ ಈ ಒಮಿಕ್ರಾನ್ ಸೋಂಕು ಭೀತಿ ಹುಟ್ಟಿಸಿರುವ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಮೇಲ್ದರ್ಜೆಗೆ ಏರಿಸಲಾಗಿದೆ. ಎರಡೂ¾ರು ವಾರದಲ್ಲಿ ಒಮಿಕ್ರಾನ್ ಸೋಂಕು ಪತ್ತೆ ಕಾರ್ಯ ಆರಂಭವಾಗುವ ನಿರೀಕ್ಷೆ ಇದೆ.
ಸಿಕ್ವೆನ್ಸಿಂಗ್ ಪರೀಕ್ಷೆ ಮೂಲಕ ಮಾತ್ರ ಒಮಿಕ್ರಾನ್ ಸೋಂಕು ದೃಢಪಡಿಸಲು ಸಾಧ್ಯ. ಈ ನಿಟ್ಟಿನಲ್ಲಿ ಈಗಾಗಲೇ ಒಮಿಕ್ರಾನ್ ಪತ್ತೆಗೆ ಬೇಕಾದ ತಂತ್ರಜ್ಞಾನ ಅಳವಡಿಸಲಾಗಿದೆ. ತರಬೇತಿ ಪಡೆದ ಒಬ್ಬ ವಿಜ್ಞಾನಿ ಹಾಗೂ ಆರು ಸಿಬ್ಬಂದಿ ನಿಯೋಜಿಸಲಾಗಿದೆ. ಸರ್ಕಾರದ ಸೂಚನೆ ಬಂದ ತಕ್ಷಣವೇ ಲ್ಯಾಬ್ ಕಾರ್ಯಾರಂಭವಾಗಲಿದೆ ಎಂದು ಜಿಮ್ಸ್ ನಿರ್ದೇಶಕಿ ಡಾ| ಕವಿತಾ ಪಾಟೀಲ ಮಾಹಿತಿ ನೀಡಿದ್ದಾರೆ. ಕೊರೊನಾ ಸೋಂಕಿನ ರೂಪಾಂತರಿ ತಳಿಗಳಾದ ಡೆಲ್ಟಾ, ಒಮಿಕ್ರಾನ್ ಯಾವುದೇ ಪತ್ತೆಯಾದರೂ ಅದನ್ನು ಕೊರೊನಾದಷ್ಟೇ ಗಂಭೀರವಾಗಿ ಪರಿಗಣಿಸಲಾಗುತ್ತದೆ. ಯಾವ ಸೋಂಕು ಕಾಣಿಸಿಕೊಂಡರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವ ನಿಯಮಗಳನ್ನೇ ಪಾಲಿಸಬೇಕಾಗುತ್ತದೆ. ಆದ್ದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದನ್ನು ಮರೆಯಬಾರದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್