ಸಿಎಂ ಕಾರ್ಯದರ್ಶಿಯಾಗಿ ಗಿರೀಶ್ ಹೊಸೂರ್
Team Udayavani, Apr 10, 2020, 5:20 AM IST
ಬೆಂಗಳೂರು: ರಾಜ್ಯ ಸರಕಾರ ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಮುಖ್ಯಮಂತ್ರಿ ಕಾರ್ಯದರ್ಶಿ ಆರ್.ವಿಶಾಲ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿ ಸದ್ಯ ಹುದ್ದೆಯ ನಿರೀಕ್ಷೆಯಲ್ಲಿದ್ದ ಐಎಫ್ಎಸ್ ಅಧಿಕಾರಿ ಡಾ| ಗಿರೀಶ್ ಹೊಸೂರ್ ಅವರನ್ನು ಮುಖ್ಯಮಂತ್ರಿ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರ ಹುದ್ದೆಯನ್ನು ಸರಕಾರದ ಕಾರ್ಯದರ್ಶಿ ಹುದ್ದೆಯ ಸಮಾನ ಶ್ರೇಣಿಗೇರಿಸಲಾಗಿದೆ. ಉಪ ಮುಖ್ಯಮಂತ್ರಿ ಡಾ| ಸಿ.ಎನ್. ಅಶ್ವತ್ಥನಾರಾಯಣ ಅವರ ಕಾರ್ಯದರ್ಶಿಯಾಗಿದ್ದ ಪಿ. ಪ್ರದೀಪ್ ಅವರನ್ನು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.
ಅನಿರುದ್ಧ ಶ್ರವಣ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರನ್ನಾಗಿ ಹಾಗೂ ಜ್ಯೋತಿ ಕೆ. ಅವರನ್ನು ಬೆಂಗಳೂರು ವಿವಿ(ಜ್ಞಾನಭಾರತಿ) ರಿಜಿಸ್ಟ್ರಾರ್ ಹುದ್ದೆಗೆ ವರ್ಗಾಯಿಸಲಾಗಿದೆ. ರಿಜಿಸ್ಟ್ರಾರ್ ಹುದ್ದೆಯನ್ನು ಸ್ಥಳೀಯ ಪೌರಾಡಳಿತ ಸಂಸ್ಥೆಯ ನಿರ್ದೇಶಕರ ಹುದ್ದೆಯ ಸಮಾನಾಂತರ ಶ್ರೇಣಿಗೇರಿಸಿ ಆದೇಶ ಹೊರಡಿಸಲಾಗಿದೆ.