ಸಿದ್ದರಾಮಯ್ಯ ಸುಳ್ಳು ಭವಿಷ್ಯಗಾರ : ಡಿಸಿಎಂ ಗೋವಿಂದ ಕಾರಜೋಳ ಆರೋಪ
Team Udayavani, Jan 9, 2021, 3:31 PM IST
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ರಾಜಕೀಯ ಭವಿಷ್ಯ ಎಂದೂ ಸತ್ಯವಾಗಿಲ್ಲ. ಅವರೊಬ್ಬ ಸುಳ್ಳು ಭವಿಷ್ಯಗಾರ ಎಂದು ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಖುರ್ಚಿ ಅಲುಗಾಡುತ್ತಿದೆ ಎನ್ನುವ ಸಿದ್ದರಾಮಯ್ಯ ಭವಿಷ್ಯ ಎಂದೂ ಸತ್ಯವಾಗಿಲ್ಲ. ಮುಂದಿನ ಎರಡೂವರೆ ವರ್ಷ ಯಡಿಯೂರಪ್ಪ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿರುತ್ತಾರೆ. ಅವರ
ನೇತೃತ್ವದಲ್ಲೇ ಸರ್ಕಾರ ನಡೆಯುತ್ತದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಉಸ್ತುವಾರಿ ಅರುಣಸಿಂಗ್ ಅವರು ಯಡಿಯೂರಪ್ಪ ಅವರ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೊನಾ ನಿರ್ವಹಣೆ, ಪ್ರವಾಹ, ಬರ ಎಲ್ಲವನ್ನೂ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಕಾಂಗ್ರೆಸ್ನವರು ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯೂ ಹಚ್ಚಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ನಶಿಸಿ ಹೋಗಿದೆ. ಆ ಪಕ್ಷ ಅಳಿವಿನಂಚಿನಲ್ಲಿದೆ. ನಾಯಕರಿಲ್ಲದ ಪಕ್ಷವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಹಗಲು ಗನಸು ಕಾಣುತ್ತಿದ್ದಾರೆ. ರಾಜ್ಯ, ದೇಶದಲ್ಲಿ ಇನ್ನು ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದರು.