ಪ್ರತೀ ಗ್ರಾ.ಪಂ. ಮಟ್ಟದಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವ ಸೋಮಶೇಖರ್
Team Udayavani, Feb 5, 2022, 5:10 AM IST
ಮಡಿಕೇರಿ ರಾಜ್ಯದ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಹಕಾರ ಸಂಘಗಳನ್ನು ಸ್ಥಾಪಿಸಿ ಬಲಪಡಿಸಲು ಕ್ರಮ ಕೈಗೊಳ್ಳಲಾಗುವುದು. ಈ ಅವಕಾಶ ವನ್ನು ಗ್ರಾಮೀಣ ಸಹಕಾರಿ ಗಳು ಬಳಸಿಕೊಳ್ಳುವಂತಾಗ ಬೇಕು ಎಂದು
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಕರೆ ನೀಡಿದ್ದಾರೆ.
ಕುಶಾಲನಗರ ತಾಲೂಕಿನ ಹೆಬ್ಟಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟಿಸಿ ಸಚಿವರು ಮಾತನಾಡಿದರು.
ಸಹಕಾರ ಕ್ಷೇತ್ರದಲ್ಲಿ ರಾಜ್ಯವು ತನ್ನದೇ ಆದ ಸ್ಥಾನ ಹೊಂದಿದ್ದು, ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ಎಲ್ಲ ಸಹಕಾರ ನೀಡಲಾಗುತ್ತಿದೆ. ಅದನ್ನು ಸಹಕಾರಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.
ಹಳೆಯ ಪದ್ಧತಿಯಲ್ಲಿ ಸಾಲ
ಹೊಸದಾಗಿ ಅನುಷ್ಠಾನಕ್ಕೆ ತಂದಿರುವ ಸಾಫ್ಟವೇರ್ನಿಂದ ರೈತರಿಗೆ ಸಾಲ ವಿತರಣೆಗೆ ತೊಂದರೆಯಾಗುತ್ತಿದೆ, ಸಿಬಂದಿಗೆ ತರಬೇತಿಯಾಗಿಲ್ಲ. ರೈತರು ನೋಂದಣಿ ಕಚೇರಿಯಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾ. 31 ರ ವರೆಗೆ ಹಳೆಯ ಪದ್ಧತಿಯಲ್ಲಿಯೇ ರೈತರಿಗೆ ಸಾಲ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಎ. 1ರಿಂದ ಹೊಸ ಸಾಫ್ಟ್ವೇರ್ ಆ್ಯಪ್ ಮೂಲಕ ಕ್ರಮ ಕೈಗೊಳ್ಳಬೇಕು ಎಂದರು.