ಲಿಂಗಾಯತ, ಉ.ಕರ್ನಾಟಕಕ್ಕೆ ಸಿಂಹಪಾಲು
Team Udayavani, Aug 21, 2019, 3:09 AM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ತಮ್ಮ ಸಚಿವ ಸಂಪುಟದಲ್ಲಿ ಲಿಂಗಾಯತ ಸಮುದಾಯದ ಶಾಸಕರಿಗೆ ಸಿಂಹಪಾಲು ನೀಡುವ ಮೂಲಕ ಸಮುದಾಯಕ್ಕೆ ಪ್ರಾತಿನಿಧ್ಯ ಇಲ್ಲ ಎನ್ನುವ ಕೊರತೆಯನ್ನು ನೀಗಿಸಿದ್ದಾರೆ. ಅಲ್ಲದೇ, ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಎಂಬ ಕೂಗು ಕೇಳದಂತೆ ಮಾಡಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯ 105 ಶಾಸಕರಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಶಾಸಕರೇ 38 ಜನರಿದ್ದಾರೆ. 34 ಜನರಿಗೆ ಅವಕಾಶ ಇರುವ ಸಂಪುಟದಲ್ಲಿ ಯಡಿಯೂರಪ್ಪನವರು 17 ಜನರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಅದರಲ್ಲಿಯೇ ಅರ್ಧದಷ್ಟು ಅಂದರೆ, ಮುಖ್ಯಮಂತ್ರಿಯನ್ನು ಹಿಡಿದು 8 ಜನ ಲಿಂಗಾಯತ ಸಮುದಾಯದವರಿಗೆ ಅವಕಾಶ ದೊರೆತಿದೆ.
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆರಂಭದಿಂದಲೂ ಲಿಂಗಾಯತ ಸಮುದಾಯದವರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸ್ವತಃ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಅಖೀಲ ಭಾರತ ವೀರ ಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬಹಿ ರಂಗವಾಗಿ ಆರೋಪಿಸಿದ್ದರು. ಅಲ್ಲದೇ, ಸರ್ಕಾರದ ಆಯ ಕಟ್ಟಿನ ಸ್ಥಳಗಳಲ್ಲಿಯೂ ವೀರಶೈವ-ಲಿಂಗಾಯತ ಸಮು ದಾಯದ ಅಧಿಕಾರಿಗಳಿಗೆ ಆದ್ಯತೆ ನೀಡುತ್ತಿಲ್ಲ ಎಂಬ ಕೂಗು ಕೂಡ ಕೇಳಿ ಬಂದಿತ್ತು.
ನಂತರ, ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ದಲ್ಲಿಯೂ ಲಿಂಗಾಯತ ಸಮುದಾಯವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಎರಡೂ ಪಕ್ಷಗಳಿಂದ ಲಿಂಗಾಯತ ಸಮುದಾಯದ ಕೇವಲ ಮೂವರು ಶಾಸಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಪ್ರಮುಖವಾಗಿ ಎಂ.ಬಿ.ಪಾಟೀಲ್, ಶಾಮನೂರು ಶಿವಶಂಕರಪ್ಪ, ಎಸ್.ಆರ್.ಪಾಟೀಲ್, ಎಚ್.ಕೆ. ಪಾಟೀಲ್ ಅವರನ್ನು ಸಂಪುಟದಿಂದ ಹೊರಗೆ ಇಟ್ಟಿದ್ದರಿಂದ, ಮೈತ್ರಿ ಸರ್ಕಾರ ವೀರಶೈವ-ಲಿಂಗಾಯತ ಸಮುದಾಯದ ವಿರುದ್ಧವಿದೆ ಎಂಬ ಅಭಿಪ್ರಾಯ ಮೂಡುವಂತಾಗಿತ್ತು.
ಮುಂಬೈ ಕರ್ನಾಟಕದ ಪ್ರಾಬಲ್ಯ: ನೂತನ ಸಚಿವ ಸಂಪುಟದಲ್ಲಿ 17 ಜನ ಸಚಿವರಲ್ಲಿ ಮುಂಬೈ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಐದು ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಲಾಗಿದ್ದು, ಐವರೂ ಲಿಂಗಾಯತ ಸಮುದಾಯದವರೇ ಸಚಿವರಾಗಿದ್ದಾರೆ. ಬಾಗಲಕೋಟೆಯಿಂದ ಗೋವಿಂದ ಕಾರಜೋಳ ಹೊರತು ಪಡಿಸಿ, ಮುಂಬೈ ಕರ್ನಾಟಕ ಭಾಗದಲ್ಲಿ ಲಿಂಗಾಯತ ಸಮುದಾಯದವರಿಗೆ ಸಚಿವ ಸ್ಥಾನ ನೀಡಲಾಗಿದೆ.
ದಕ್ಷಿಣ ಕರ್ನಾಟಕ ಭಾಗ ದಲ್ಲಿಯೂ ಲಿಂಗಾಯತ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಬೆಂಗಳೂರಿನಲ್ಲಿ ವಿ.ಸೋಮಣ್ಣ ಹಾಗೂ ತುಮಕೂರಿನಲ್ಲಿ ಜೆ.ಸಿ.ಮಾಧುಸ್ವಾಮಿ ಅವರಿಗೆ ಅವಕಾಶ ಕಲ್ಪಿಸುವ ಮೂಲಕ ಹಳೇ ಮೈಸೂರು ಭಾಗದಲ್ಲಿಯೂ ಸಮುದಾಯದ ಮತಗಳನ್ನು ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ 96 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗಳಿಸಿಕೊಂಡಿತ್ತು.
ವಿಶೇಷವಾಗಿ ಮುಂಬೈ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಏಳೂ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರು ಆಯ್ಕೆಯಾಗಿದ್ದು, ಅವರಲ್ಲಿ ಐವರು ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೀಗಾಗಿ, ಪಕ್ಷದ ಭದ್ರಕೋಟೆಯಾಗಿರುವ ಮುಂಬೈ ಕರ್ನಾಟಕ ಭಾಗದಲ್ಲಿ ವೀರಶೈವ-ಲಿಂಗಾಯತ ಸಮುದಾಯವನ್ನು ಪಕ್ಷದ ಜತೆಗೆ ಉಳಿಸಿಕೊಳ್ಳಲು ಬಿಜೆಪಿ ಈ ತಂತ್ರ ಅನುಸರಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೈದರಾಬಾದ್ ಕರ್ನಾಟಕಕ್ಕಿಲ್ಲ ಪ್ರಾತಿನಿಧ್ಯ: ಹೈದರಾಬಾದ್ ಕರ್ನಾಟಕದ ಆರು ಜಿಲ್ಲೆಗಳ 40 ಕ್ಷೇತ್ರಗಳಲ್ಲಿ ಕೇವಲ ಬೀದರ್ ಜಿಲ್ಲೆಗೆ ಮಾತ್ರ ಪ್ರಾತಿನಿಧ್ಯ ನೀಡಲಾಗಿದ್ದು, ಉಳಿದ ಐದು ಜಿಲ್ಲೆಗಳಿಗೆ ಸಚಿವ ಸ್ಥಾನ ನೀಡದಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗವನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
* ಶಂಕರ ಪಾಗೋಜಿ