Agri: ಕೃಷಿ ಸಂಶೋಧನೆಗಳು ರೈತರಿಗೆ ತಲುಪಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Oct 19, 2023, 12:39 AM IST
ಬೆಂಗಳೂರು: ಕೃಷಿ ಸಂಶೋಧನೆಗಳು ಸೂಕ್ತ ರೀತಿಯಲ್ಲಿ ರೈತರಿಗೆ ತಲುಪಿದಾಗ ಮಾತ್ರ ಸುಸ್ಥಿರ ಕೃಷಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದೇಸಿ ಸಮ್ಮೇಳನ ಹಾಗೂ ಬೇಕಿಂಗ್ ಮೌಲ್ಯವರ್ಧನೆ ಸಂಸ್ಥೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ವಿವಿಗಳು ಅಭಿವೃದ್ಧಿಪಡಿಸಿರುವ ಹೊಸ ತಳಿಗಳು ರೈತರಿಗೆ ತಲುಪಿವೆಯೇ ಎಂದು ಪರೀಕ್ಷಿಸಿಕೊಳ್ಳಿ. ಇಲ್ಲದಿದ್ದರೆ ಹೊಸ ತಳಿಗಳನ್ನು ಅಭಿವೃದ್ಧಿ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಂಶೋಧನೆ-ಅಧ್ಯಯನ ಮತ್ತು ವಿಸ್ತರಣೆ ಕಾರ್ಯಗಳಿಗೆ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.
ತಂತ್ರಜ್ಞಾನದಿಂದಲೇ ಸುಸ್ಥಿರತೆ
ಕಂದಾಯ ಸಚಿವ ಕೃಷ್ಣಬೈರೇ ಗೌಡ ಮಾತನಾಡಿ, ಇತ್ತೀಚೆಗೆ ಕೃಷಿಯಲ್ಲಿ ಇಳುವರಿ ಕಡಿಮೆಯಾಗುತ್ತಿದೆ. ತಂತ್ರಜ್ಞಾನದಿಂದಲೇ ಸುಸ್ಥಿರತೆ ಕಂಡುಕೊಳ್ಳಬೇಕಾಗಿದೆ ಎಂದರು.
ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಮಾತನಾಡಿ, ವಿವಿಧ ಕಾರಣಗಳಿಂದ ರೈತರ ಪ್ರಗತಿ ಕುಂಠಿತವಾಗುತ್ತಿದೆ. ಉದ್ಯೋಗ ಅರಸಿ ಪಟ್ಟಣದತ್ತ ಮುಖ ಮಾಡುತ್ತಿರುವವರ ಪ್ರಮಾಣ ಹೆಚ್ಚುತ್ತಿದೆ. ಕೃಷಿಯಲ್ಲಿ ಸದೃಢವಾದರೆ ಹತ್ತಾರು ಮಂದಿಗೆ ಉದ್ಯೋಗ ಕೊಡಬಹುದು ಎಂದು ಹೇಳಿದರು.