ರಾಜ್ಯಸಭೆಗೆ ಆಸಕ್ತಿ ತೋರದ ಮಲ್ಲಿಕಾರ್ಜುನ ಖರ್ಗೆ
Team Udayavani, Nov 30, 2019, 3:05 AM IST
ಬೆಂಗಳೂರು: ಕೆ.ಸಿ.ರಾಮಮೂರ್ತಿ ರಾಜೀನಾಮೆಯಿಂದ ತೆರವಾದ ರಾಜ್ಯಸಭೆಯ ಒಂದು ಸ್ಥಾನದ ಚುನಾವಣೆಗೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆದಿದೆ.
ರಾಜ್ಯ ವಿಧಾನಸಭೆಯಲ್ಲಿ ಹಾಲಿ ಸದಸ್ಯ ಬಲದ ಆಧಾರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅನಾಯಾಸವಾಗಿ ಗೆಲುವು ಸಾಧಿಸಲು ಅವಕಾಶವಿದೆ. ಆದರೆ, 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವು ದರಿಂದ ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುವುದಕ್ಕಿಂತಲೂ ಮುಂಚೆಯೇ ಉಪ ಚುನಾವಣೆಯ ಫಲಿತಾಂಶ ಬರುತ್ತದೆ. ಬಿಜೆಪಿ ಕನಿಷ್ಠ 5ಕ್ಕಿಂತ ಕಡಿಮೆ ಸ್ಥಾನ ಪಡೆದರೆ ರಾಜ್ಯಸಭೆ ಚುನಾವಣೆಯಲ್ಲೂ ಜೆಡಿಎಸ್ ಬೆಂಬಲದೊಂದಿಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬಹುದು ಎನ್ನುವ ಲೆಕ್ಕಾಚಾರವನ್ನು ಕಾಂಗ್ರೆಸ್ ಹಾಕುತ್ತಿದೆ ಎಂದು ತಿಳಿದು ಬಂದಿದೆ.
ಒಂದು ವೇಳೆ, ಬಿಜೆಪಿ ಕನಿಷ್ಠ 5ಕ್ಕಿಂತ ಕಡಿಮೆ ಸ್ಥಾನ ಪಡೆದರೆ, ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಮತ್ತೆ ಮೈತ್ರಿ ಸರ್ಕಾರ ರಚನೆಗೆ ಈ ಬೆಳವಣಿಗೆ ಪೂರಕವೂ ಆಗುತ್ತದೆ ಎಂಬ ಲೆಕ್ಕಾಚಾರ ಹೈಕಮಾಂಡ್ ಮಟ್ಟದಲ್ಲಿ ನಡೆದಿದೆ ಎನ್ನಲಾಗುತ್ತಿದೆ. ರಾಜ್ಯದಿಂದ ರಾಜ್ಯಸಭೆಗೆ ಪಕ್ಷದ ವತಿಯಿಂದ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ರಾಜ್ಯ ನಾಯಕರು ಇನ್ನೂ ಆಲೋಚನೆಯೇ ಮಾಡಿಲ್ಲ ಎನ್ನಲಾಗಿದೆ. ಏಕೆಂದರೆ, ರಾಜ್ಯ ವಿಧಾನಸಭೆಯ ಲೆಕ್ಕಾಚಾರದಲ್ಲಿ ಕಾಂಗ್ರೆಸ್, ಜೆಡಿಎಸ್ ಸೇರಿ 100 ಸಂಖ್ಯಾಬಲವಾಗಲಿದ್ದು, ಬಿಜೆಪಿ 105 ಸಂಖ್ಯಾಬಲ ಹೊಂದಿದೆ.
ಪಕ್ಷೇತರ ಶಾಸಕರಾಗಿರುವ ಎಚ್.ನಾಗೇಶ್ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿದ್ದು, ಅವರು ಚುನಾವಣೆಯಲ್ಲಿ ಮತದಾನ ಮಾಡುವ ಸಂದರ್ಭದಲ್ಲಿ ಯಾರಿಗೆ ಮತ ಹಾಕುತ್ತಾರೆ ಎಂದು ತೋರಿಸುವ ಅಗತ್ಯವಿಲ್ಲ. ಹೀಗಾಗಿ, ಅವರ ಮತ ಹಾಗೂ ಬಿಎಸ್ಪಿಯ ಸದಸ್ಯ ಎನ್.ಮಹೇಶ್ ಮತ ಚುನಾವಣೆ ಸಂದರ್ಭದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತಾರೆ ಎನ್ನುವುದರ ಮೇಲೆ ನಿರ್ಧಾರವಾಗುತ್ತದೆ.
ಈಗಿರುವ ರಾಜ್ಯ ವಿಧಾನಸಭೆಯ 222 ಸಂಖ್ಯಾಬಲದಲ್ಲಿ (ಉಪ ಚುನಾವಣೆ ಫಲಿತಾಂಶ ಬಂದ ನಂತರ) ಕಾಂಗ್ರೆಸ್, ಜೆಡಿಎಸ್ನ ಬೆಂಬಲ ಪಡೆದರೂ ಗೆಲುವಿಗೆ ಕನಿಷ್ಠ 112 ಸದಸ್ಯರ ಬೆಂಬಲ ಅಗತ್ಯವಿದೆ. (ರಾಜರಾಜೇಶ್ವರಿ, ಮಸ್ಕಿ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯದಿರುವುದ ರಿಂದ ಖಾಲಿ ಉಳಿದಿವೆ). ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಕನಿಷ್ಠ 5ಕ್ಕಿಂತ ಕಡಿಮೆ ಗೆದ್ದು,
ಕಾಂಗ್ರೆಸ್ ಹಾಗೂ ಜೆಡಿಎಸ್ ಕನಿಷ್ಠ 10 ಸ್ಥಾನ ಗೆದ್ದು, ಇಬ್ಬರೂ ಪಕ್ಷೇತರ ಶಾಸಕರ ಬೆಂಬಲ ಪಡೆದರೆ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಅನುಕೂಲವಾಗುತ್ತದೆ ಎನ್ನುವ ಲೆಕ್ಕಾಚಾರ ಹಾಕಿಕೊಳ್ಳಲಾಗಿದೆ. ಅದೇ ಕಾರಣಕ್ಕೆ ಖರ್ಗೆ ಅವರನ್ನು ಕಣಕ್ಕಿಳಿಸಿದರೆ, ಜೆಡಿಎಸ್ ವರಿಷ್ಠ ದೇವೇಗೌಡರು ಬೆಂಬಲ ನೀಡುವ ಸಾಧ್ಯತೆ ಇರುತ್ತದೆ. ಆ ಹಿನ್ನೆಲೆಯಲ್ಲಿ ಕೈ ಹೈಕಮಾಂಡ್ ಖರ್ಗೆಯವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಖರ್ಗೆ ಹಿಂದೇಟು: ಆದರೆ, ಪ್ರಸಕ್ತ ಪರಿಸ್ಥಿತಿಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಇಲ್ಲದಿರುವುದರಿಂದ ಹಾಗೂ ಜೆಡಿಎಸ್ ನಡೆ ಏನು ಎನ್ನುವುದು ಇನ್ನೂ ಸ್ಪಷ್ಟವಾಗದಿರುವುದರಿಂದ ಗೊಂದಲದ ಪರಿಸ್ಥಿತಿಯಲ್ಲಿ ಕಣಕ್ಕಿಳಿಯಲು ಖರ್ಗೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಜೆಡಿಎಸ್ ಬೆಂಬಲ ನೀಡಿದರೂ, ಡಿ.9ರ ಉಪ ಚುನಾವಣೆಯ ಫಲಿತಾಂಶದ ಮೇಲೆಯೇ ರಾಜ್ಯಸಭೆ ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರದ ಸ್ಪಷ್ಟ ಚಿತ್ರಣ ಸಿಗುತ್ತದೆ.
ಫಲಿತಾಂಶ ನಂಬಿ ನಾಮಪತ್ರ ಸಲ್ಲಿಸಿ, ನಿರೀಕ್ಷಿಸಿದಷ್ಟು ಸ್ಥಾನಗಳು ಬರದೇ ಹೋದರೆ, ಮುಜುಗರ ಅನುಭವಿ ಸುವುದು ಬೇಡ ಎನ್ನುವ ಕಾರಣಕ್ಕೆ ಖರ್ಗೆ ಅಭ್ಯರ್ಥಿಯಾಗಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಖರ್ಗೆಯವರು ಸ್ಪರ್ಧೆಗೆ ಹಿಂದೇಟು ಹಾಕಿ ದರೆ ಪರ್ಯಾಯ ಅಭ್ಯರ್ಥಿಗಳಾಗಿ ಅಬ್ದುಲ್ ವಹಾಬ್ ಹಾಗೂ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರ ಹೆಸರುಗಳು ಕೇಳಿ ಬರುತ್ತಿವೆ. ಆದರೆ, ಈ ಬಗ್ಗೆ ಅಧಿಕೃತ ಚರ್ಚೆಗಳು ನಡೆದಿಲ್ಲ ಎನ್ನಲಾಗುತ್ತಿದೆ. ನಾಮಪತ್ರ ಸಲ್ಲಿಕೆಗೆ ಡಿ.2 ಕೊನೆಯ ದಿನವಾಗಿರುವುದರಿಂದ ಕಾಂಗ್ರೆಸ್ ನಡೆ ಕುತೂಹಲ ಮೂಡಿಸಿದೆ.
ಸಿದ್ದುಗೆ ಅನುಕೂಲ?: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹತ್ತಕ್ಕೂ ಹೆಚ್ಚು ಸ್ಥಾನ ಪಡೆದರೆ ರಾಜ್ಯದಲ್ಲಿ ಮತ್ತೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ಒಂದು ವೇಳೆ, ಖರ್ಗೆಯವರು ರಾಜ್ಯದಲ್ಲಿಯೇ ಉಳಿದರೆ ಸಿದ್ದರಾಮಯ್ಯ ಅವರಿಗೆ ತೊಡಕಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ, ಖರ್ಗೆಯವರನ್ನು ರಾಜ್ಯಸಭೆಗೆ ಕಳುಹಿಸುವುದರಿಂದ ಸಿದ್ದರಾಮಯ್ಯಗೆ ರಾಜ್ಯ ಕಾಂಗ್ರೆಸ್ ಮೇಲಿನ ಹಿಡಿತವನ್ನು ತಮ್ಮ ಕೈಯಲ್ಲಿಯೇ ಇಟ್ಟುಕೊಳ್ಳಲು ಸಾಧ್ಯವಾಗುತ್ತದೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ