Mangalore ಲೋಕಸಭಾ ಕ್ಷೇತ್ರ; ದಕ್ಷಿಣ ಕನ್ನಡ ಜಿಲ್ಲೆ ಶಾಸಕರ ನಿಯೋಗ ವಿಜಯೇಂದ್ರ ಭೇಟಿ
Team Udayavani, Feb 14, 2024, 11:46 PM IST
ಬೆಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯ ಶಾಸಕರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಸಂಭಾವ್ಯ ಅಭ್ಯರ್ಥಿಯೊಬ್ಬರ ಬಗ್ಗೆ ಅಪಸ್ವರ ಎತ್ತಿದೆ.
ಹಾಲಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೆ ಟಿಕೆಟ್ ಇಲ್ಲ ಎಂಬುದು ಬಹುತೇಕ ಖಾತ್ರಿಯಾಗಿರುವ ಹಿನ್ನೆಲೆಯಲ್ಲಿ ಸಂಘ ಹಾಗೂ ಯಡಿಯೂರಪ್ಪ ಅವರಿಗೆ ಒಪ್ಪಿತವಾದ ಅಭ್ಯರ್ಥಿಯ ಹೆಸರು ಈಗ ಮುನ್ನೆಲೆಗೆ ಬಂದಿದೆ. ಆದರೆ, ಜಿಲ್ಲೆಯ ಶಾಸಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಬೇರೆ ಹೆಸರು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಈ ಬಾರಿ ಮಂಗಳೂರು, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರಕನ್ನಡ ಜಿಲ್ಲೆಯ ಪೈಕಿ ಒಂದು ಕಡೆ ಬಿಲ್ಲವ ಸಮುದಾಯಕ್ಕೆ ಆದ್ಯತೆ ನೀಡಬೇಕೆಂಬ ಬೇಡಿಕೆ ಇದೆ. ಹೀಗಾಗಿ ಮಂಗಳೂರಿಗೆ ಬಿಲ್ಲವರಿಗೆ ಅವಕಾಶ ನೀಡಬೇಕೆಂದು ಒತ್ತಾಯಿಸಲಾಗಿದೆ ಎಂದು ತಿಳಿದುಬಂದಿದೆ.