ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ-ಫಲಾನುಭವಿಗಳ ಆಯ್ಕೆ ತ್ವರಿತಗೊಳಿಸಿ-ಜಿಲ್ಲಾಧಿಕಾರಿ ಸೂಚನೆ
Team Udayavani, Nov 17, 2023, 12:23 AM IST
ಮಂಗಳೂರು: ಇಲಾಖೆಗೆ ಸಂಬಂಧಪಟ್ಟ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ಯೋಜನೆ ಲಾಭವನ್ನು ಸಾರ್ವಜನಿಕರಿಗೆ ಶೀಘ್ರವಾಗಿ ತಲುಪಿಸಲು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್ ಎಂ.ಪಿ. ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾಕರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆಯಾದ ಅನಂತರ ನಿಯಮಾನುಸಾರ ಪರಿಶೀಲಿಸಿ ಫಲಾನುಭವಿಗಳ ಆಯ್ಕೆಯಾದ ಕಡತವನ್ನು ಸಲ್ಲಿಸಬೇಕು. ಫಲಾನುಭವಿಗಳ ಆಯ್ಕೆ ಪಟ್ಟಿಯೊಂದಿಗೆ ವೈಟಿಂಗ್ ಲಿಸ್ಟ್ ಕೂಡ ತಯಾರಿಸಬೇಕು. ಆಯ್ಕೆಯಾದವರು ತಾಂತ್ರಿಕ ಕಾರಣಗಳಿಂದ ಅನರ್ಹಗೊಂಡರೆ ವೈಟಿಂಗ್ ಲಿಸ್ಟ್ನಲ್ಲಿರುವವರನ್ನು ಆಯ್ಕೆ ಮಾಡಬೇಕು ಎಂದು ಸೂಚಿಸಿದರು.
ವಿದ್ಯಾರ್ಥಿಗಳು ಇಲ್ಲದಿದ್ದರೂ ಕಡಬ ಪಟ್ಟಣದಲ್ಲಿ ಬಾಲಕಿಯರ ಹಾಸ್ಟೆಲ್ ಹೊಸ ಕಟ್ಟಡ ನಿರ್ಮಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ವಸತಿ ನಿಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ನೀಡಲು ಕ್ರಮ ಕೈಗೊಳುವಂತೆ ಸೂಚಿಸಿದರು. ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮದ ವಿವಿಧ ಯೋಜನೆ ಫಲಾನುಭವಿಗಳ ಪಟ್ಟಿಯನ್ನು ಕೂಡಲೇ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರವೇಶ ಹೆಚ್ಚಳಕ್ಕೆ ಒತ್ತು ನೀಡಬೇಕು. ಹಾಸ್ಟೆಲ್ಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಗಮನಹರಿಸಬೇಕು ಎಂದು ನಿರ್ದೇಶಿಸಿದರು.
ಜಿ.ಪಂ. ಸಿಇಒ ಡಾ| ಆನಂದ್ ಕೆ., ಎಡಿಸಿ ಡಾ| ಸಂತೋಷ್ ಕುಮಾರ್, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.