ಶುಲ್ಕ ಹೆಚ್ಚಳಕ್ಕೆ ವಿದ್ಯಾರ್ಥಿ ಸಂಘಟನೆಗಳ ವಿರೋಧ
Team Udayavani, May 2, 2020, 6:21 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯ ಸರಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ಗಳ ಶುಲ್ಕ ಹೆಚ್ಚಳ ಮಾಡಿರುವುದಕ್ಕೆ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್, ಎಐಡಿಎಸ್ಒ ಮತ್ತು ಎಂಎಸ್ಎ ಸಹಿತವಾಗಿ ವಿವಿಧ ವಿದ್ಯಾರ್ಥಿ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಕೋವಿಡ್-19 ನಿಂದಾಗಿ ಜನರ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಇಂಥ ಸಂದರ್ಭದಲ್ಲಿ ಸರಕಾರ ಶುಲ್ಕ ಹೆಚ್ಚಿಸಿರುವುದು ಸರಿಯಲ್ಲ ಎಂದು ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಹರ್ಷನಾರಾಯಣ ಹೇಳಿದ್ದಾರೆ.
ಶುಲ್ಕ ಹೆಚ್ಚಳ ಮಾಡಿರುವ ನಿರ್ಧಾರ ದಿಂದ ಸರಕಾರ ಕೂಡಲೇ ಹಿಂದೆ ಸರಿಯಬೇಕು. ಸರಕಾರಿ ವೈದ್ಯಕೀಯ ಕಾಲೇಜುಗಳಿಗೆ ಮೂಲ ಸೌಕರ್ಯ ಒದಗಿಸಬೇಕು. ಸರ ಕಾರದಿಂದಲೇ ಎಲ್ಲ ಸೀಟು ಭರ್ತಿ ಮಾಡಬೇಕು ಎಂದು ಆಗ್ರಹಿಸಿರುವ ಎಐಡಿಎಸ್ಒ ಮತ್ತು ಎಂಎಸ್ಎ ವಿದ್ಯಾರ್ಥಿ ಸಂಘಟನೆಯ ಕೆ.ಎಸ್.ಅಶ್ವಿನಿ ಮತ್ತು ಅಜಯ್ ಕಾಮತ್ ಕೋವಿಡ್- 19 ವಿಷಮ ಪರಿಸ್ಥಿತಿಯಲ್ಲಿ ಇಂಥ ನಿರ್ಧಾರ ತೆಗೆದುಕೊಂಡಿರುವುದು ಖಂಡನೀಯ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ತೀವ್ರ ಆಕ್ರೋಶ
ಬೆಂಗಳೂರು: ರಾಜ್ಯ ಸರಕಾರ ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿರುವುದಕ್ಕೆ ವಿದ್ಯಾರ್ಥಿಗಳು, ಮತ್ತವರ ಹೆತ್ತವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋವಿಡ್- 19 ದಾಳಿಯಿಂದ ಪ್ರತಿಯೊಬ್ಬರ ಆರ್ಥಿಕ ಸ್ಥಿತಿಯು ಸಂಕಷ್ಟದಲ್ಲಿದೆ. ಇಂಥ ಸಂದರ್ಭಗಳಲ್ಲಿ ಸರಕಾರ ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಿರುವುದು ಸರಿಯಲ್ಲ. ಹೀಗಾಗಿ ಸರಕಾರ ಇದನ್ನು ಪುನರ್ ಪರಿಶೀಲಿಸಬೇಕು ಎಂದು ವಿದ್ಯಾರ್ಥಿಗಳ ಹೆತ್ತವರು ಆಗ್ರಹಿಸಿದ್ದಾರೆ. ಸರಕಾರ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಶುಲ್ಕ ಹೆಚ್ಚಳ ಮಾಡಬಾರದು ಎಂದು ಸೂಚನೆ ನೀಡಿದೆ. ಇದೇ ಸರಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ಗಳ ಶುಲ್ಕ ಹೆಚ್ಚಳಕ್ಕೆ ಅವಕಾಶ ನೀಡಿದೆ.ಇಂಥ ಪರಿಸ್ಥಿತಿಯಲ್ಲಿ ಸರಕಾರದ ಈ ನಿರ್ಧಾರ ಖಂಡನೀಯ ಎಂದವರು ಹೇಳಿದ್ದಾರೆ.