Karnataka: ಅಧಿಕಾರಿ ನೇಮಕ ವಿಳಂಬವಾದರೆ ದಂಡ- ಕೇಂದ್ರ ಸರಕಾರಕ್ಕೆ ಹೈಕೋರ್ಟ್ ಎಚ್ಚರಿಕೆ
Team Udayavani, Oct 26, 2023, 12:45 AM IST
ಬೆಂಗಳೂರು: ಕೇಂದ್ರ ಸರಕಾರದ ಕೈಗಾರಿಕಾ ನ್ಯಾಯಾಧೀಕರಣ (ಕಾರ್ಮಿಕ ನ್ಯಾಯಾಲಯ) ಬೆಂಗಳೂರು ಇದರ ಪೀಠಾಸೀನಾಧಿಕಾರಿಯ ನೇಮಕಾತಿ ವಿಚಾರದಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್, ಮುಂದಿನ ಮೂರು ವಾರಗಳಲ್ಲಿ ಈ ಸಂಬಂಧ ಸಕಾರಾತ್ಮಕ ಕ್ರಮ ಕೈಗೊಳ್ಳದಿದ್ದರೆ 10 ಲಕ್ಷ ರೂ. ದಂಡ ತೆರಬೇಕಾಗುತ್ತದೆ ಎಂದು ಕೇಂದ್ರ ಸರಕಾರಕ್ಕೆ ಎಚ್ಚರಿಕೆ ನೀಡಿದೆ. ನವೆಂಬರ್ 7ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.
ಈ ಸಂಬಂಧ ಕೈಗಾರಿಕಾ ಕಾನೂನು ಅಭ್ಯಸಕಾರರ ವೇದಿಕೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಕೇಂದ್ರ ಸರಕಾರದ ಪರ ವಕೀಲರು ವಾದ ಮಂಡಿಸಿ, ಕೈಗಾರಿಕಾ ನ್ಯಾಯಾಧೀಕರಣಕ್ಕೆ ಪೀಠಾಸೀನಾಧಿಕಾರಿಯಾಗಿ ಒಬ್ಬರನ್ನು 2022ರ ಆ. 18ರಂದು ನೇಮಕ ಮಾಡಲಾಗಿತ್ತು. ಆದರೆ, ಅವರು ಅಧಿಕಾರ ವಹಿಸಿಕೊಂಡಿಲ್ಲ. ಹೀಗಾಗಿ ಹೊಸ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಆ ಪ್ರಕ್ರಿಯೆ ಕೇಂದ್ರ ಸಂಪುಟದ ನೇಮಕಾತಿ ಸಮಿತಿ ಹಂತದಲ್ಲಿದೆ. 2 ವಾರ ಕಾಲಾವಕಾಶ ಕೊಟ್ಟರೆ ವಸ್ತುಸ್ಥಿತಿಯನ್ನು ನ್ಯಾಯಾಲಯಕ್ಕೆ ತಿಳಿಸಲಾಗುವುದು ಎಂದರು.