ಶಿಕ್ಷಕರ ವರ್ಗಾವಣೆಗೆ ನಡೆದಿದೆ ಸಿದ್ಧತೆ
Team Udayavani, May 1, 2019, 3:02 AM IST
ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆಗೆ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿರುವುದರಿಂದ ನನೆಗುದಿಗೆ ಬಿದ್ದಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೂ ಚಾಲನೆ ಸಿಗುವ ಕಾಲ ಸನ್ನಿಹಿತವಾಗಿದೆ.
ಶಿಕ್ಷಕರ ವರ್ಗಾವಣೆ ಕುರಿತ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ)(ತಿದ್ದುಪಡಿ)ವಿಧೇಯಕ ತಿದ್ದುಪಡಿ, ರಾಜ್ಯಪಾಲರ ಅಂಕಿತ, ಕಡ್ಡಾಯ ವರ್ಗಾವಣೆ, ದಂಪತಿ ಶಿಕ್ಷಕರ ಸಮಸ್ಯೆ, ರಾಜ್ಯ ವಿಧಾನಸಭಾ ಚುನಾವಣೆ, ಉಪ ಚುನಾವಣೆ, ಲೋಕಸಭೆ ಚುನಾವಣೆ…ಹೀಗೆ ಹತ್ತಾರು ಕಾರಣಗಳಿಂದ ಕಳೆದ ಎರಡು ಮೂರು ವರ್ಷದಿಂದ ಸರ್ಕಾರಿ ಶಾಲಾ ಶಿಕ್ಷಕರ ವರ್ಗವಣೆ ಪ್ರಕ್ರಿಯೆ ನಡೆದಿಲ್ಲ.
ಐದಾರು ಬಾರಿ ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿ ಕೂಡ ಆಹ್ವಾನಿಸಲಾಗಿತ್ತು. ಸುಮಾರು 72 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ಇನ್ನೇನು ವರ್ಗಾವಣೆ ಕೌನ್ಸೆಲಿಂಗ್ ಆರಂಭವಾಗಲಿದೆ ಎನ್ನುವಷ್ಟರಲ್ಲಿ ಚುನಾವಣೆ ನೀತಿ ಸಂಹಿತೆಯ ಕಾರಣಕ್ಕಾಗಿ ತಾತ್ಕಾಲಿಕ ತಡೆ ನೀಡಲಾಗಿತ್ತು.
ಈಗ ಚುನಾವಣಾ ಆಯೋಗವೇ ಅನುಮತಿ ಕಲ್ಪಿಸಿದ್ದರಿಂದ ಹೊಸದಾಗಿ ಅಧಿಸೂಚನೆ ಹೊರಡಿಸಲು ಇಲಾಖೆಯ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸದಾಗಿ ಅರ್ಜಿ ಆಹ್ವಾನಿಸಬೇಕೇ ಅಥವಾ ಈಗಾಗಲೇ ಬಂದಿರುವ ಅರ್ಜಿಯಂತೆ ವರ್ಗಾವಣೆ ಮಾಡಬೇಕೇ ಎಂಬುದರ ಬಗ್ಗೆ ಇಲಾಖೆಯಲ್ಲಿ ಚರ್ಚೆ ನಡೆಯಲಿದೆ.
ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ಇಲಾಖೆ ಅಧಿಕಾರಿಗಳ ಸಭೆ ಕರೆದು ಮಾತುಕತೆ ನಡೆಸುವ ನಿರೀಕ್ಷೆಯೂ ಇದೆ. ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಅಧಿನಿಯಮ-2018ಕ್ಕೆ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿತ್ತು. ಅದರಂತೆ ರಾಜ್ಯಪಾಲರ ಅಂಕಿತ ಕೂಡ ಬಿದ್ದಿದೆ.
ಪ್ರಮುಖ ತಿದ್ದುಪಡಿ: ಭರ್ತಿಯಾಗದೆ ಖಾಲಿ ಉಳಿದ ಸ್ಥಾನಕ್ಕೆ ಸರ್ಕಾರದಿಂದ ನೇರ ವರ್ಗಾವಣೆ, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಲು ಇದ್ದ ಕನಿಷ್ಠ ಸೇವಾವಧಿಯನ್ನು ಐದು ವರ್ಷದಿಂದ ಮೂರು ವರ್ಷಕ್ಕೆ ಇಳಿಸಲಾಗಿದೆ. ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣೆಗೆ ಸಂಬಂಧಿಸಿದಂತೆ ನಗರಪಾಲಿಕೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳನ್ನು ನಗರ ಪ್ರದೇಶದ ವ್ಯಾಪ್ತಿಯೊಳಗೆ ಸೇರಿಸಿಲ್ಲ.
ಎ ವಲಯ (ನಗರ ಪ್ರದೇಶ)ದಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ಶಿಕ್ಷಕರನ್ನು ಸಿ ವಲಯ(ಗ್ರಾಮೀಣ ಪ್ರದೇಶ)ಕ್ಕೆ ಶೇ.5ರಷ್ಟು ಮಿತಿಯಲ್ಲಿ ಕಡ್ಡಾಯ ವರ್ಗಾವಣೆ ಮಾಡಲಾಗಿದೆ. ಒಬ್ಬ ಶಿಕ್ಷಕ ಅಥವಾ ಆ ಶಿಕ್ಷಕ ದಂಪತಿ ಅಥವಾ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಮತ್ತು ಅದಕ್ಕೆ ವೈದ್ಯಕೀಯ ಚಿಕಿತ್ಸೆ ಎಲ್ಲಿಯೂ ದೊರೆಯದಿದ್ದಲ್ಲಿ,
ದಂಪತಿ ಶಿಕ್ಷಕರ ವರ್ಗಾವಣೆಗಾಗಿ ಒಂದೇ ಸ್ಥಳದಲ್ಲಿ ನಿಯೋಜಿಸಲು ಕಡ್ಡಾಯ ವರ್ಗಾವಣೆಯಿಂದ ವಿನಾಯತಿ ನೀಡಲಾಗುತ್ತದೆ. ದಂಪತಿ ಶಿಕ್ಷಕರಲ್ಲಿ ಯಾರಾದರು ಒಬ್ಬರು ಸರ್ಕಾರಿ ಅಥವಾ ಸಾರ್ವಜನಿಕ ವಲಯದ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದರೆ ಆ ಪ್ರದೇಶಕ್ಕೆ ವರ್ಗಾವಣೆ ಮಾಡಲು ತಿದ್ದುಪಡಿಯನ್ನು ಹೊಸದಾಗಿ ತರಲಾಗಿದೆ.
ಶಿಕ್ಷಕರ ವರ್ಗಾವಣೆಗೆ ಚುನಾವಣಾ ಆಯೋಗದಿಂದ ಅನುಮತಿ ಸಿಕ್ಕಿದೆ. ಹೀಗಾಗಿ, ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ಕಾರ್ಯ ಆರಂಭಿಸಿದ್ದೇವೆ. ನಿಯಮಗಳ ಪ್ರಕಾರವೇ ಪ್ರಕ್ರಿಯೆ ನಡೆಸಲಿದ್ದೇವೆ.
-ಎಸ್.ಆರ್.ಉಮಾಶಂಕರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿ.