ಶಿಕ್ಷಣ ಗುಣಮಟ್ಟ ಸುಧಾರಣೆಗೆ ಆದ್ಯತೆ: ಮುಖ್ಯಮಂತ್ರಿ ಸೂಚನೆ
Team Udayavani, Jun 7, 2019, 7:54 PM IST
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಮಕ್ಕಳ ಕಲಿಕೆಯ ಮಟ್ಟ ಕುರಿತು ಏಕ ಕಾಲದಲ್ಲಿ 40 ಲಕ್ಷ ಮಕ್ಕಳ ಮೌಲ್ಯಮಾಪನ ನಡೆಸಿದ ಏಕೈಕ ರಾಜ್ಯ ನಮ್ಮದು. ಈ ಮೌಲ್ಯಮಾಪನದ ಆಧಾರದಲ್ಲಿ ಸುಮಾರು 12 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ಗುರುತಿಸಿ ಪರಿಹಾರ ಬೋಧನೆಗೆ ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಹೆಚ್ಚಿನ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಮಕ್ಕಳ ಆಲೋಚನಾ ಮತ್ತು ಅನ್ವಯಿಕ ಶಕ್ತಿಯನ್ನು (Higher order thinking) ವೃದ್ಧಿಸುವ ನಿಟ್ಟಿನಲ್ಲಿ ಪರೀಕ್ಷಾ ವಿಧಾನದಲ್ಲಿ ಸೂಕ್ತ ಬದಲಾವಣೆ ತರುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸುವಂತೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಸಮರ್ಪಕವಾಗಿ ನಡೆಯುವಂತೆ ಹಾಗೂ ಕೇಂದ್ರದ ಅನುದಾನಕ್ಕೆ ಕಾಯದೆ, ಎರಡು ಜೊತೆ ಸಮವಸ್ತ್ರ ವಿತರಿಸುವಂತೆ ಸೂಚನೆ ನೀಡಿದರು. ಸರ್ಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ 300 ಶಾಲೆಗಳಲ್ಲಿ ಹೆಚ್ಚುವರಿ ತರಗತಿಗಳನ್ನು ಪ್ರಾರಂಭಿಸುವಂತೆ ಬೇಡಿಕೆ ಬಂದಿದೆ. ನುರಿತ ತರಬೇತಿ ಹೊಂದಿದ ಶಿಕ್ಷಕರು ಈ ಶಾಲೆಗಳಲ್ಲಿ ಲಭ್ಯವಿದ್ದರೆ ಇನ್ನು ಒಂದು ಹೆಚ್ಚುವರಿ ತರಗತಿಯನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದರು.
ಶಿಕ್ಷಕರು ತಮ್ಮ ಸೇವಾ ವಿಷಯಗಳಿಗೆ ಸರ್ಕಾರಿ ಕಚೇರಿಗಳಿಗೆ ಓಡಾಡುವುದನ್ನು ತಪ್ಪಿಸಲು ಶೀಘ್ರವೇ ಸೇವಾ ಸೌಲಭ್ಯಗಳನ್ನು ಆನ್ಲೈನ್ನಲ್ಲಿ ನೀಡಲು ತಂತ್ರಾಂಶ ರೂಪಿಸಿ, ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ನಡೆಸಿದ ಪೂರ್ವ ಸಿದ್ಧತೆಗಳನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು. ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಜಂಟಿ ಸಭೆ ನಡೆಸಲು ತೀರ್ಮಾನಿಸಲಾಯಿತು.
ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಕುರಿತಾಗಿ ಸರ್ಕಾರದ ಅಭಿಪ್ರಾಯ ತಿಳಿಸುವ ನಿಟ್ಟಿನಲ್ಲಿ ಶಿಕ್ಷಣ ತಜ್ಞರು, ಪೋಷಕರು, ಶಾಲಾಭಿವೃದ್ಧಿ ಸಮಿತಿ ಗಳು ಮತ್ತಿತರ ಸಂಬಂಧಪಟ್ಟ ಭಾಗೀದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಗಳು ತಿಳಿಸಿದರು.
ಪ್ರೌಢ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ, ಒಂದೇ ಮಂಡಳಿಯ ಮೂಲಕ 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚರ್ಚಿಸಿ, ಇದಕ್ಕೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಗ್ರಂಥಾಲಯ ಇಲಾಖೆಯಡಿಯಲ್ಲಿ ಡಿಜಿಟಲ್ ಲೈಬ್ರರಿಗಳನ್ನು ಜಿಲ್ಲಾ ಮಟ್ಟದಲ್ಲಿ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಡಾ. ಎಸ್. ಸುಬ್ರಹ್ಮಣ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಇಲಾಖೆಯ ಆಯುಕ್ತ ಡಾ. ಪಿ.ಸಿ. ಜಾಫರ್, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಡಾ. ಎಂ.ಟಿ. ರೆಜು ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.