ನೆರೆ ಸಂತ್ರಸ್ತರಿಗೆ ಅತೀ ಶೀಘ್ರದಲ್ಲಿ ಕೇಂದ್ರದಿಂದ ಪರಿಹಾರ : ನಳಿನ್
Team Udayavani, Oct 1, 2019, 10:12 PM IST
ಬೆಳಗಾವಿ: ರಾಜ್ಯದಲ್ಲಿ ಉಂಟಾಗಿರುವ ಭೀಕರ ನೆರೆ ಹಾವಳಿಯಿಂದ ತತ್ತರಿಸಿರುವ ಸಂತ್ರಸ್ತರಿಗೆ ನೆರವಾಗಲು ಇನ್ನು ನಾಲ್ಕೈದು ದಿನಗಳಲ್ಲಿ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ಹೇಳಿದರು. ನಗರದಲ್ಲಿ ಮಂಗಳವಾರ ಸಂಜೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.
ದೇಶದ 16 ರಾಜ್ಯಗಳು ನೆರೆ ಹಾವಳಿಯಿಂದ ತತ್ತರಿಸಿವೆ. ಎಲ್ಲ ರಾಜ್ಯಗಳಿಂದ ವರದಿ ಬಂದ ನಂತರ ಕೇಂದ್ರ ಸರಕಾರ ಹಣ ಬಿಡುಗಡೆ ಮಾಡುತ್ತದೆ ಎಂದು ಹೇಳಿದರು. ಕರ್ನಾಟಕ ಸರಕಾರ ಮೊದಲು ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮೊದಲು ಹಣ ರಾಜ್ಯಕ್ಕೆ ಬಿಡುಗಡೆ ಯಾಗಲಿದೆ ಎಂದು ಹೇಳಿದರು. ರಾಜ್ಯ ಸರಕಾರ ಸಂತ್ರಸ್ತರ ಪರವಾಗಿದೆ. ಯಾವುದೇ ಕಾರಣಕ್ಕೂ ಅವರನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ. ಮನೆಗಳ ನಿರ್ಮಾಣಕ್ಕಾಗಿ ಶೀಘ್ರದಲ್ಲೇ ಸಂತ್ರಸ್ತರ ಖಾತೆಗೆ ಒಂದು ಲಕ್ಷ ರೂ ಹಣ ಜಮಾ ಮಾಡಲಾಗುತ್ತಿದೆ ಎಂದರು. ಇದಕ್ಕೂ ಮುನ್ನ ನಗರಕ್ಕೆ ಪ್ರಥಮ ಬಾರಿಗೆ ಆಗಮಿಸಿದ ಅಧ್ಯಕ್ಷರನ್ನು ಕೇಂದ್ರ ಸಚಿವ ಸುರೇಶ ಅಂಗಡಿ ಹಾಗೂ ಪಕ್ಷದ ಮುಖಂಡರು ಬರಮಾಡಿಕೊಂಡರು.