ಸ್ಯಾಂಡಲ್ ವುಡ್ ನಟ ದರ್ಶನ್ ಮನೆ, ಕಚೇರಿ ಮೇಲೆ ಕಲ್ಲು ತೂರಾಟ
Team Udayavani, Mar 23, 2019, 8:01 AM IST
ಬೆಂಗಳೂರು: ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಮತ್ತು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ಕಲ್ಲು ತೂರಾಟ ನಡೆಸಿದ ಪರಿಣಾಮ ಕಾರಿನ ಗಾಜು ಒಡೆದಿದ್ದು, ದುಷ್ಕರ್ಮಿಗಳು ಸ್ಥಳದಿಂದ ಓಡಿಹೋಗಿರುವುದಾಗಿ ವರದಿ ತಿಳಿಸಿದೆ. ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಮೇಲೆ ಮಧ್ಯರಾತ್ರಿ ಮತ್ತು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಪ್ರಕರಣದ ಬಗ್ಗೆ ಮಾಹಿತಿ ತಿಳಿದ ಕೆಂಗೇರಿ ಹಾಗೂ ರಾಜರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲ್ಲು ತೂರಾಟ ಘಟನೆ ಬಗ್ಗೆ ದರ್ಶನ್ ಈವರೆಗೂ ಅಧಿಕೃತ ದೂರನ್ನಾಗಲಿ, ಹೇಳಿಕೆಯನ್ನಾಗಲಿ ನೀಡಿಲ್ಲ. ಇತ್ತೀಚೆಗಷ್ಟೇ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸುಮಲತಾ ಅಂಬರೀಶ್ ಪರವಾಗಿ ಸಮಾರಂಭದಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ನಮ್ಮ ಬಗ್ಗೆ ಏನೇ ಹೇಳಿದರೂ ಪ್ರತಿಕ್ರಿಯೆ ನೀಡಲ್ಲ. ನಿಮ್ಮ ಗೊಡ್ಡು ಬೆದರಿಕೆಗೆ ಬೆದರಲ್ಲ ಎಂದು ತಿರುಗೇಟು ನೀಡಿದ್ದರು.