ಗೋಹತ್ಯೆ ವಿಷಯದಲ್ಲಿ ಬಿಜೆಪಿ ದ್ವಂದ್ವ ನಿಲುವು: ಸಿದ್ದರಾಮಯ್ಯ
Team Udayavani, Nov 21, 2020, 11:49 PM IST
ಬೆಂಗಳೂರು: ಗೋಹತ್ಯೆ ವಿಷಯದಲ್ಲಿ ಬಿಜೆಪಿ ನಾಯಕರದ್ದು ದ್ವಂದ್ವ ನಿಲುವು. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಬಳಿಕ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಅತಿ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರ ಪ್ರದೇಶದಲ್ಲಿ. ಆ ವ್ಯವಹಾರದಲ್ಲಿ ತೊಡಗಿರುವ ಅನೇಕ ವ್ಯಾಪಾರಿಗಳು ಕೂಡ ಬಿಜೆಪಿಯವರು ಎಂದರು.
ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರಕಾರ 1964ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.