ಸ್ಪೀಕರ್ ರಾಜಧರ್ಮ ಪಾಲಿಸಲಿ: ಪೂಜಾರಿ
Team Udayavani, Jul 12, 2019, 5:49 AM IST
ಬೆಂಗಳೂರು: “ಸ್ಪೀಕರ್ ರಾಜಧರ್ಮ ಪಾಲಿಸಬೇಕು. ಶಾಸಕರು ಸಲ್ಲಿಸಿದ ರಾಜೀನಾಮೆಯನ್ನು ಕ್ಷೇತ್ರದ ಜನರನ್ನು ಕೇಳಿ ಅಂಗೀಕರಿಸುವ ಉದಾಹರಣೆ ಇಲ್ಲ’ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಗುರುವಾರ ಪ್ರತಿಕ್ರಿಯಿಸಿದ ಅವರು, “ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಮುಖ್ಯಮಂತ್ರಿಗಳು ಇನ್ನೂ ಕುರ್ಚಿಗೆ ಅಂಟಿಕೊಂಡಿರುವುದರಲ್ಲಿ ಅರ್ಥವಿಲ್ಲ. ಕೂಡಲೇ ಅವರು ರಾಜೀನಾಮೆ ನೀಡಬೇಕು.
ವಿಧಾನಸೌಧದಲ್ಲಿ ಬುಧವಾರ ಸಂಜೆ ಸ್ಪೀಕರ್ ಕಣ್ಣೆದುರೇ ಘಟನೆ ನಡೆದಿದೆ. ಈ ನಿಟ್ಟಿನಲ್ಲಿ ಸ್ಪೀಕರ್ ರಾಜಧರ್ಮ ಪಾಲಿಸಬೇಕು ಎಂದು ತಿಳಿಸಿದರು. ಬಿಜೆಪಿ ಶಾಸಕ
ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಸ್ಪೀಕರ್ ಒಂದು ಪಕ್ಷದ ಕಾರ್ಯಕರ್ತರಂತೆ ನಡೆದುಕೊಳ್ಳುತ್ತಿದ್ದು, ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಅಧಿವೇಶನದ ಒಳಗೆ ಹಾಗೂ ಹೊರಗೆ ಶಾಸಕರಿಗೆ ಸಂಬಂಧಪಟ್ಟಂತೆ ಯಾವುದೇ ಘಟನೆ ನಡೆದರೂ ಅದಕ್ಕೆ ಸ್ಪೀಕರ್ ಜವಾಬ್ದಾರರಾಗಿರುತ್ತಾರೆ ಎಂದರು.