ಜೂ. 25ರಿಂದ ಎಸೆಸೆಲ್ಸಿ ಪರೀಕ್ಷೆ : ಸುರಕ್ಷೆಗೆ ಆದ್ಯತೆ, ಆತಂಕ ಅನಗತ್ಯ
Team Udayavani, Jun 16, 2020, 8:07 AM IST
ಉಡುಪಿ: ಎಸೆಸೆಲ್ಸಿ ಪರೀಕ್ಷೆಯು ಈಗಾಗಲೇ ನಿಗದಿಯಾದಂತೆ ಜೂ. 25ರಿಂದ ನಡೆಯಲಿದೆ. ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಗೊಂದಲ ಮೂಡಿಸುವ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸೆಸೆಲ್ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳ ಸುರಕ್ಷೆಗೆ ಅತ್ಯಂತ ಗರಿಷ್ಠ ಆದ್ಯತೆ ನೀಡಲಾಗುತ್ತದೆ. ಪೋಷಕರಿಗೆ ಏನಾದರೂ ಗೊಂದಲಗಳಿದ್ದಲ್ಲಿ ಶಿಕ್ಷಣ ಇಲಾಖೆಯ ಸಹಾಯ
ವಾಣಿಯನ್ನು ಸಂಪರ್ಕಿಸಬಹುದು ಎಂದರು.
ಸ್ಯಾನಿಟೈಸೇಶನ್
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಪ್ರತೀ ಪರೀಕ್ಷೆಯ ಅನಂತರ ಮತ್ತೂಮ್ಮೆ ಸ್ಯಾನಿಟೈಸ್ ಮಾಡಲಾಗುವುದು. ಪ್ರತೀ ವಿದ್ಯಾರ್ಥಿಗೆ ಪ್ರವೇಶ ಪತ್ರದೊಂದಿಗೆ ತಲಾ 2 ಮಾಸ್ಕ್ ವಿತರಿಸಲಾಗುತ್ತಿದೆ.
ಸಾಮಾಜಿಕ ಅಂತರ, ಆರೋಗ್ಯ ಪರೀಕ್ಷೆ
ಪರೀಕ್ಷಾ ಕೇಂದ್ರದೊಳಗೆ ಸಾಮಾಜಿಕ ಅಂತರದೊಂದಿಗೆ ಪ್ರವೇಶ ನೀಡಲಾಗುತ್ತದೆ. ಪ್ರತೀ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರೀಕ್ಷಿಸಲಾಗುತ್ತದೆ. ಕೊಠಡಿಯಲ್ಲಿ 18ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.
ಬಸ್ ವ್ಯವಸ್ಥೆ
ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಒದಗಿಸಲು ರೂಟ್ ಮ್ಯಾಪ್ ಸಿದ್ಧಪಡಿಸಲಾಗುತ್ತಿದ್ದು, ಪ್ರತೀ ರೂಟ್ಗೆ ಉಸ್ತುವಾರಿಯಾಗಿ ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ.
ಮನೆಯಿಂದ ಕುಡಿಯುವ ನೀರು
ವಿದ್ಯಾರ್ಥಿಗಳು ಮನೆಯಿಂದಲೇ ಕುದಿಸಿ ಆರಿಸಿದ ಕುಡಿಯುವ ನೀರು ತರಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರತಿಯೊಬ್ಬರನ್ನೂ ಪರಿಶೀಲಿಸಿ, ಪರೀಕ್ಷಾ ಕೇಂದ್ರದೊಳಗೆ ಬಿಡಬೇಕಾಗಿರುವುದರಿಂದ ಆದಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.