ಸ್ವಜಾತಿಯವರ ಒಳಜಾತಿ ಕೋಟಾ ತಲೆನೋವು
Team Udayavani, Dec 14, 2019, 3:09 AM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಠ ಹಿಡಿದು ಸರ್ಕಾರ ರಚಿಸಿ, ಬಹುಮತಕ್ಕೆ ಅಗತ್ಯವಿರುವ ಶಾಸಕರನ್ನು ಗೆಲ್ಲಿಸಿಕೊಂಡು ನೆಮ್ಮದಿಯ ನಿಟ್ಟುಸಿರು ಬಿಟ್ಟಿರುವ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ನಡೆಸಿದ್ದಾರೆ. ಸಂಪುಟದಲ್ಲಿ ಸೇರ್ಪಡೆಯಾಗಲು ವಲಸಿಗರು ಹಾಗೂ ಮೂಲ ಬಿಜೆಪಿ ಶಾಸಕರು ಲಾಬಿ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸ್ವಜಾತಿಯ ಶಾಸಕರು ಒಳ ಪಂಗಡದ ಕೋಟಾದಡಿ ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಿರುವುದು ಮತ್ತೂಂದು ತಲೆನೋವಾಗಿ ಪರಿಣಮಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದಲ್ಲಿ 99 ಒಳ ಪಂಗಡಗಳಿದ್ದು, ಪ್ರಮುಖವಾಗಿ ಬಣಜಿಗ, ಪಂಚಮಸಾಲಿ, ಸಾದರ, ನೊಣಬ, ರೆಡ್ಡಿ ಲಿಂಗಾಯತ, ಗಾಣಿಗ ಸಮುದಾಯಗಳು ರಾಜಕೀಯವಾಗಿ ಪ್ರಾಬಲ್ಯ ಹೊಂದಿದ್ದು, ಹಾಲಿ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿ 8 ಜನ ವೀರಶೈವ ಲಿಂಗಾಯತ ಸಮುದಾಯದ ಸಚಿವರಿದ್ದು, ಇತ್ತಿಚೆಗೆ ನಡೆದ ಉಪ ಚುನಾವಣೆಯಲ್ಲಿ ಗೆದ್ದು ಬಂದಿರುವ ಬಿ.ಸಿ.ಪಾಟೀಲ್ ಹಾಗೂ ಮಹೇಶ್ ಕುಮಠಳ್ಳಿ ಕೂಡ ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದಾರೆ. ಅವರಿಗೂ ಸಂಪುಟದಲ್ಲಿ ಅವಕಾಶ ದೊರೆತರೆ ಹತ್ತು ಜನ ವೀರಶೈವ ಲಿಂಗಾಯತ ಸಮದಾಯದವರಿಗೆ ಅವಕಾಶ ದೊರೆತಂತಾಗುತ್ತದೆ.
ವಿಧಾನಸಭೆಯಲ್ಲಿ ಪ್ರಾತಿನಿಧ್ಯ: ರಾಜ್ಯ ವಿಧಾನಸಭೆಯಲ್ಲಿ 224 ಶಾಸಕರ ಪೈಕಿ ಮೂರು ಪಕ್ಷಗಳಿಂದ 69 ವೀರಶೈವ ಲಿಂಗಾಯತ ಸಮುದಾಯದಿಂದ ಆಯ್ಕೆಯಾಗಿರುವ ಶಾಸಕರಿದ್ದಾರೆ. ಅದರಲ್ಲಿ ಬಿಜೆಪಿಯಿಂದ ಅತಿ ಹೆಚ್ಚು 41 ಜನ ವೀರಶೈವ ಲಿಂಗಾಯತ ಸಮುದಾಯದ ಶಾಸಕರು ಆಯ್ಕೆಯಾಗಿದ್ದು, ಕಾಂಗ್ರೆಸ್ನಲ್ಲಿ 14, ಜೆಡಿಎಸ್ನಿಂದ ನಾಲ್ವರು ಆಯ್ಕೆಯಾಗಿದ್ದಾರೆ.
ಅತಿ ಹೆಚ್ಚು ಶಾಸಕರನ್ನು ಹೊಂದಿರುವ ಸಮುದಾಯಕ್ಕೆ ಆದ್ಯತೆ ನೀಡುವ ದೃಷ್ಠಿಯಿಂದ ಹೆಚ್ಚು ವೀರಶೈವ ಶಾಸಕರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಈಗ ಆ ಸಮುದಾಯದ ಒಳ ಪಂಗಡಗಳಿಗೆ ಆದ್ಯತೆ ನೀಡಿಲ್ಲ ಎನ್ನುವ ಕಾರಣಕ್ಕೆ ರೆಡ್ಡಿ ಲಿಂಗಾಯತ, ಜಂಗಮರು ಹಾಗೂ ಆದಿ ಬಣಜಿಗ ಒಳ ಪಂಗಡಗಳಿಗೆ ಪ್ರಾತಿನಿಧ್ಯ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ.
ಒಳಪಂಗಡದ ಲೆಕ್ಕಾಚಾರ: ವೀರಶೈವ ಲಿಂಗಾಯತ ಸಮುದಾಯದಲ್ಲಿ ಈಗಾಗಲೇ ಪ್ರಾತಿನಿಧ್ಯ ದೊರೆತಿರುವ ಸಮುದಾಯಗಳಿಗೆ ಸೇರಿದ ಕೆಲವು ಶಾಸಕರೂ ತಮ್ಮ ಜಿಲ್ಲೆ ಹಾಗೂ ಹಿರಿತನದ ಆಧಾರದಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದಾರೆ. ಅವರ ಹೊರತಾಗಿ ಸಮುದಾಯದ ಒಳ ಪಂಗಡದ ಲೆಕ್ಕಾಚಾರದಲ್ಲಿ ಸಂಪುಟ ಸೇರಲು ಕಸರತ್ತು ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ರೆಡ್ಡಿ ಲಿಂಗಾಯತರಿಗೆ ಸ್ಥಾನದ ಬೇಡಿಕೆ: ವೀರಶೈವ ಸಮುದಾಯದಲ್ಲಿ ರೆಡ್ಡಿ ಲಿಂಗಾಯತ ಸಮುದಾಯವೂ ರಾಜಕೀಯವಾಗಿ ಪ್ರಬಲವಾಗಿದ್ದು, ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೆಡ್ಡಿ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಐವರು ಶಾಸಕರು ಬಿಜೆಪಿಯಿಂದ ಆಯ್ಕೆಯಾಗಿದ್ದು, ಎಲ್ಲ ಸರ್ಕಾರಗಳ ಸಂಪುಟದಲ್ಲಿಯೂ ರೆಡ್ಡಿ ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗುತ್ತಿತ್ತು.
ಆದರೆ, ಈ ಸಂಪುಟದಲ್ಲಿ ಅವಕಾಶ ನೀಡಿಲ್ಲ ಎನ್ನುವ ಕಾರಣಕ್ಕೆ ರೆಡ್ಡಿ ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಮುಖ್ಯಮಂತ್ರಿ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ. ರೆಡ್ಡಿ ಲಿಂಗಾಯತ ಸಮುದಾಯದಲ್ಲಿ ಮೂರು ಬಾರಿ ಆಯ್ಕೆಯಾಗಿರುವ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಗೂ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಅವರಲ್ಲಿ ಒಬ್ಬರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕೆಂದು ರೆಡ್ಡಿ ಲಿಂಗಾಯತ ಸಮುದಾಯದ ಮೂಲಕ ಒತ್ತಡ ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ.
ಜಂಗಮರ ಬೇಡಿಕೆ: ವೀರಶೈವ ಲಿಂಗಾಯತ ಸಮುದಾಯದಲ್ಲಿ ಮೇರು ಸ್ಥಾನದಲ್ಲಿರುವ ಜಂಗಮ (ಅಯ್ಯನವರು) ಸಮುದಾಯಕ್ಕೂ ಪ್ರಾತಿನಿಧ್ಯ ದೊರೆತಿಲ್ಲ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಾಗೂ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರೂ ಒಳ ಪಂಗಡವನ್ನು ಮುಂದಿಟ್ಟುಕೊಂಡು ಸಂಪುಟ ಸೇರುವ ಕಸರತ್ತು ನಡೆಸಿದ್ದಾರೆ ಎನ್ನಲಾಗುತ್ತಿದೆ.
ಆದಿ ಬಣಜಿಗರ ಒತ್ತಡ: ಇನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಮುಖವಾಗಿ ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಆದಿ ಬಣಜಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕೆಂಬ ಬೇಡಿಕೆ ಹೆಚ್ಚಾಗಿದೆ ಎನ್ನಲಾಗಿದ್ದು, ಗುಲಬರ್ಗಾ ದಕ್ಷಿಣ ಕ್ಷೇತ್ರದರಿಂದ ಎರಡನೇ ಬಾರಿಗೆ ಆಯ್ಕೆಯಾಗಿರುವ ಸಮುದಾಯದ ಏಕೈಕ ಶಾಸಕ ದತ್ತು ಪಾಟೀಲ್ ರೇವೂರ್ ಅವರ ಪರವಾಗಿ ಆ ಸಮುದಾಯದ ಮುಖಂಡರು ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇವರ ಹೊರತಾಗಿಯೂ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿರುವ ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಹಿರಿತನದ ಆಧಾರದಲ್ಲಿ ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಹಾಲಿ ಸಚಿವರ ಒಳ ಪಂಗಡಗಳು
ಗಾಣಿಗ: ಲಕ್ಷ್ಮಣ ಸವದಿ
ಬಣಜಿಗ: ಜಗದೀಶ ಶೆಟ್ಟರ್, ಶಶಿಕಲಾ ಜೊಲ್ಲೆ
ಸಾದರ: ಬಸವರಾಜ ಬೊಮ್ಮಾಯಿ
ಪಂಚಮಸಾಲಿ: ಸಿ.ಸಿ. ಪಾಟೀಲ್
ನೊಣಬ: ಜೆ.ಸಿ. ಮಾಧುಸ್ವಾಮಿ
ವಿ.ಸೋಮಣ್ಣ: ಗೌಡ ಲಿಂಗಾಯತ
* ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ