World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ
ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ; ಪರಿಸರ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ
Team Udayavani, Jun 6, 2023, 5:00 AM IST
ಬೆಂಗಳೂರು: ಪ್ರತಿಯೊಬ್ಬರೂ ಪರಿಸರವನ್ನು ಚೊಕ್ಕವಾಗಿಟ್ಟುಕೊಳ್ಳಲು ಮುಂದಾಗಬೇಕು. ಎಷ್ಟೇ ಕಾನೂನು ಮಾಡಿದರೂ ಜಾಗೃತಿ ಇಲ್ಲದಿದ್ದರೆ ವ್ಯರ್ಥ. ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ – 2023ನ್ನು ಉದ್ಘಾಟಿಸಿದ ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿಯಿದೆ. ಪೂರ್ವಿಕರು ಪರಿಸರದ ಬಗ್ಗೆ ಎಚ್ಚರಿಕೆ ವಹಿಸುತ್ತಿದ್ದರು. ಹಿಂದೆ ಒಂದು ಮರ ಕಡಿದರೆ ಹತ್ತು ಸಸಿ ನೆಡುತ್ತಿದ್ದರು. ಕಾಡು ಬೆಳೆಸುವುದು ನಮ್ಮ ಕರ್ತವ್ಯ. ಪ್ರಕೃತಿ ಮತ್ತು ಮನುಷ್ಯ ಒಂದನ್ನೊಂದು ಬಿಟ್ಟು ಬದುಕಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾಲಮಿತಿ ಯೋಜನೆ ಹಾಕಿಕೊಳ್ಳಿ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಅರಣ್ಯ ಇಲಾಖೆ ಕಾಲಮಿತಿಯಲ್ಲಿ ಯೋಜನೆಗಳನ್ನು ಹಾಕಿಕೊಳ್ಳಬೇಕು. ಬುದ್ಧಿವಂತಿಕೆ, ವಿದ್ಯಾವಂತಿಕೆ ಇಲ್ಲದಿದ್ದರೂ ಪ್ರಜ್ಞಾವಂತಿಕೆ ಮತ್ತು ಸಾಮಾನ್ಯ ಜ್ಞಾನ ಇರಬೇಕು ಎಂದು ಹೇಳಿದರು. ಆ ಲೆಕ್ಕ, ಡಿಕೆ ಲೆಕ್ಕ, ಶೇ. 40 ಲೆಕ್ಕ ಎಲ್ಲ ಬದಿಗಿಡಿ. ಜನ ನಮ್ಮನ್ನು ಭಾರೀ ನಿರೀಕ್ಷೆ ಇಟ್ಟುಕೊಂಡು ಆರಿಸಿದ್ದಾರೆ. ಅವರ ಆಶೋತ್ತರಗಳಿಗೆ ನಾವು ಸ್ಪಂದಿಸಬೇಕು. ಅದರಂತೆ ಅರಣ್ಯ ಇಲಾಖೆ ಕೂಡ ವೃತ್ತಿಪರವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು. ಶಾಲಾ ಮಕ್ಕಳನ್ನು ಬಳಸಿ ಹಾದಿ ಬೀದಿಯಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲು ಯೋಜನೆ ಮಾಡಿ. ಖಾಸಗಿ ಸಂಸ್ಥೆಗಳು ತಮ್ಮ ಕಾಂಪೌಂಡ್ನೊಳಗೆ ಗಿಡ ನೆಡುವುದು ಮಾತ್ರವಲ್ಲ. ಕಾಂಪೌಂಡ್ನ ಹೊರಗೆ ಬೇರೆ ಪ್ರದೇಶಗಳಲ್ಲಿ ಗಿಡ ನೆಡುವುದು ಮತ್ತು ಸಂರಕ್ಷಿಸುವ ಪ್ರಯತ್ನ ನಡೆಸಬೇಕು ಎಂದು ಹೇಳಿದರು.
5 ಕೋಟಿ ಸಸಿ ನೆಡುವ ಯೋಜನೆ
ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಪರಿಸರ ರಕ್ಷಣೆಗೆ ಸಾಕಷ್ಟು ಕಾನೂನುಗಳಿವೆ. ಆದರೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಪರಿಸರ ಕಾಪಾಡಿದರೆ ಅದು ನಮ್ಮನ್ನು ಕಾಪಾಡಲಿದೆ ಎಂದರು. ಪ್ರತಿ ವರ್ಷ ಇಲಾಖೆಯಿಂದ 2 ಕೋಟಿ ಗಿಡ ಮತ್ತು ಸಂಘ ಸಂಸ್ಥೆಗಳಿಂದ 2.50 ಕೋಟಿ ಸಸಿಗಳನ್ನು ನೆಡಲಾಗುತ್ತದೆ. ಸರಕಾರದಿಂದ ಮುಂದಿನ ದಿನಗಳಲ್ಲಿ 5 ಕೋಟಿ ಸಸಿಗಳನ್ನು ನೆಡಲು ಮುಂದಾಗುತ್ತೇವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಿಂದೆ ನೆಟ್ಟ ಸಸಿಗಳು ಏನಾಗಿವೆ, ಎಷ್ಟು ಉಳಿದಿವೆ, ಎಂಬು ದನ್ನು ಪರಿಶೀಲಿಸಬೇಕು ಎಂದು ಹೇಳಿದರು.
ಸಾಧಕರಿಗೆ ಪರಿಸರ ಪ್ರಶಸ್ತಿ
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ 2022-23ಯನ್ನು ಬೆಂಗಳೂರಿನ ಹಾರೋಹಳ್ಳಿ ಪಾಳ್ಯದ ಮಂಜುನಾಥ್ ಎಚ್.ಎಂ., ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹೊಸಹೆರವಟ್ಟಾದ ಡಾ| ಎಂ.ಡಿ.ಸುಭಾಶ್ ಚಂದ್ರನ್, ಬಾಗಲಕೋಟೆಯ ಬೀಳಗಿ ತಾಲೂಕಿನ ಯಡಹಳ್ಳಿಯ ಡಾ| ಎಂ.ಆರ್.ದೇಸಾಯಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಸ್ಥೆಗಳ ವಿಭಾಗದಲ್ಲಿ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಹಾಸನದ ಬೇಲೂರಿನ ಹಗರೆಯ ಶ್ರೀ ದೇವಿರಮ್ಮ ವನಸಿರಿ ಟ್ರಸ್ಟ್, ರಾಯಚೂರಿನ ಸಿಂಧನೂರಿನ ನಟರಾಜ ಕಾಲನಿಯ ವನಸಿರಿ ಫೌಂಡೇಷನ್ಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು 1 ಲಕ್ಷ ರೂ. ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?