ಸಾಲ ಮನ್ನಾಕ್ಕೆ ಮಾಹಿತಿ ಪಡೆದ ಸಿಎಂ
Team Udayavani, May 26, 2018, 11:51 AM IST
ಬೆಂಗಳೂರು: ರಾಜ್ಯದ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ಗಳಲ್ಲಿ ರೈತರು ಪಡೆದಿರುವ ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿ ಆರ್ಥಿಕ ಇಲಾಖೆಯ ಅಧಿಕಾರಿಗಳ ಜತೆ ಮೊದಲ ಸಭೆ ನಡೆಸಿದ ಸಿಎಂ, ಸದ್ಯದ ಆರ್ಥಿಕ ಪರಿಸ್ಥಿತಿ, ರೈತರು ಕೃಷಿ ಚಟುವಟಿಕೆಗೆ ಪಡೆದುಕೊಂಡಿರುವ ಒಟ್ಟು ಸಾಲದ ಪ್ರಮಾಣ, ಹಿಂದಿನ ಸರ್ಕಾರದಲ್ಲಿ ಸಾಲ ಮನ್ನಾ ಮಾಡಿರುವ ಬಾಕಿ, ನೀಡಬೇಕಿರುವ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಅಲ್ಲದೆ, ಏಕ ಕಾಲಕ್ಕೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದರಿಂದ ಸರ್ಕಾರದ ಬೊಕ್ಕಸದ ಮೇಲೆ ಉಂಟಾಗುವ ವ್ಯತಿರಿಕ್ತ ಪರಿಣಾಮ ಹಾಗೂ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಮಾರ್ಗಗಳ ಬಗ್ಗೆಯೂ ಮುಖ್ಯಮಂತ್ರಿ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ.
ಶುಕ್ರವಾರ ನಡೆದ ಸಭೆಯಲ್ಲಿ ಸಂಪೂರ್ಣ ಮಾಹಿತಿ ದೊರೆಯದ ಹಿನ್ನೆಲೆಯಲ್ಲಿ ಈ ಕುರಿತು ಅಧಿಕಾರಿಗಳ ಜತೆ ಮತ್ತೂಂದು ಸಭೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಮುಖ್ಯಕಾರ್ಯದರ್ಶಿ ರತ್ನಪ್ರಭಾ, ಹಣಕಾಸು ಇಲಾಖೆ ಎಸಿಎಸ್ಐ ಎಸ್.ಎನ್.ಪ್ರಸಾದ್ ಹಾಗೂ ಹಣಕಾಸು ಇಲಾಖೆಯ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.